ಜೆಡಿಎಸ್, ಬಿಜೆಪಿ ಕುದುರೆ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ: ರಾಜಕೀಯ ತಂತ್ರಗಾರಿಕೆ ಫಲಿಸಲ್ಲ-ತನ್ವೀರ್ ಸೇಠ್ ಮೈಸೂರು,ಫೆಬ್ರವರಿ,19,2024(..):ರಾಜ್ಯ ಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ 5ನೇ ಅಭ್ಯರ್ಥಿ ಕಣಕ್ಕಿಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ತನ್ವೀರ್ ಸೇಠ್, ಜೆಡಿಎಸ್, ಬಿಜೆಪಿ ಕುದುರೆ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ. ಆದರೆ ಅವರ ರಾಜಕೀಯ ತಂತ್ರಗಾರಿಕೆ ಫಲಿಸಲ್ಲ ಎಂದು ಟಾಂಗ್ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ತನ್ವೀರ್ ಸೇಠ್, ಜೆಡಿಎಸ್ ಗೆ ನಿಗದಿತ ಪ್ರಮಾಣದ ಮತಗಳು ಇಲ್ಲ. ಗೆಲ್ಲುವ ಸಾಮರ್ಥ್ಯ ಇಲ್ಲದಿದ್ದರೂ 5ನೇ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ. ಕುದುರೆ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ ಗೆ 135 ಮತ್ತು ಮೂವರು ಪಕ್ಷೇತರರು ಸೇರಿ 138 ಶಾಸಕರ ಬೆಂಬಲವಿದೆ. ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸುತ್ತಾರೆ. ಜೆಡಿಎಸ್ ಬಿಜೆಪಿ ರಾಜಕೀಯ ತಂತ್ರಗಾರಿಕೆ ಫಲಿಸುವುದಿಲ್ಲ. ಕುದುರೆ ವ್ಯಾಪಾರದ ಮೂಲಕ ಶಾಸಕರನ್ನ ಸೆಳೆಯುವುದನ್ನ ತಪ್ಪಿಸಬೇಕು. ಪಕ್ಷಾಂತರ ನಿಷೇಧ ಕಾಯ್ದೆಯನ್ನ ಬಿಗಿ ಪಡಿಸಬೇಕು. ಒಮ್ಮೆ ಒಬ್ಬರು ಪಕ್ಷಾಂತರ ಮಾಡಿದ ಮೇಲೆ 6 ವರ್ಷ ಚುನಾವಣೆಗೆ ನಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ತನ್ವಿರ್ ಸೇಠ್ ತಿಳಿಸಿದರು. ಲೋಕಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ತನ್ವಿರ್ ಸೇಠ್, ರಾಜಕೀಯ ನಿಂತ ನಿರಲ್ಲ, ಹರಿಯುವ ನೀರು. ಅಧಿಕಾರದ ದಾಹ ಇರುವವರು ಪಕ್ಷ ತೊರೆಯುತ್ತಾರೆ. ಇದರಿಂದ ಪಕ್ಷಕ್ಕೆ ನಷ್ಟ ಏನಿಲ್ಲ. ಬದ್ಧತೆ, ತತ್ವ ಸಿದ್ಧಾಂತಗಳ ಮೇಲೆ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಬದ್ಧತೆ ಇಲ್ಲದೆ ಇರುವವರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತ ಮೋದಿ ಹೇಳ್ತಿದ್ದಾರೆ. ಅದಕ್ಕೆ ವ್ಯತಿರಿಕ್ತವಾಗಿ ಫಲಿತಾಂಶ ಹೊರ ಬೀಳಲಿದೆ. ಜನತೆ ಸ್ವಚ್ಛ ಪಾರದರ್ಶಕ ಆಡಳಿತ ಬಯಸಿದ್ದಾರೆ ಎಂದು ಹೇಳಿದರು. : - – – -