ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ… ಮಂಗಳೂರು,ಸೆ,6,2019(..): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಐಎಎಸ್ ಸೇವೆಗೆ ರಾಜೀನಾಮೆ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಸಲ್ಲಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ವೈಯಕ್ತಿಕ ಕಾರಣ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಜಿಲ್ಲೆಯ ವಿಚಾರದಲ್ಲಿ ರಾಜೀನಾಮೆ ತಳುಕು ಹಾಕೋದು ಬೇಡ. ಜಿಲ್ಲೆಯ ಜನಪ್ರತಿನಿಧಿಗಳು ಜನರು ಬೆಂಬಲ ನೀಡಿದ್ದಾರೆ. ಅರ್ಧದಲ್ಲೇ ಹುದ್ದೆ ತ್ಯಜಿಸುತ್ತಿರುವುದಕ್ಕೆ ಜಿಲ್ಲೆಯ ಜನರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸಿಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ ಎನ್ನಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದ್ದು ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿರುವುದು ಅನೈತಿಕ ಎನಿಸಿದ ಕಾರಣ ರಾಜೀನಾಮೆ ನಿರ್ಧಾರ ಕೈಗೊಂಡಿರುವುದಾಗಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು. ಡಿಸಿ ಶಶಿಕಾಂತ್ ಸೆಂಥಿಲ್ ಅವರ ಪತ್ರದಲ್ಲೇನಿದೆ ಗೊತ್ತೆ…? ನಾನು ಇಂದು ನನ್ನ ಭಾರತೀಯ ಆಡಳಿತಾತ್ಮಕ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳಿವೆಯೇ ಹೊರತು ಯಾವುದೇ ವೈಮನಸ್ಸಿಲ್ಲ. ನನ್ನ ಸದ್ಯದ ಮಂಗಳೂರು ಡಿಸಿ ಪೋಸ್ಟ್​ಗೂ ರಾಜೀನಾಮೆಗೂ ಸಂಬಂಧವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮತ್ತು ಅಧಿಕಾರಿಗಳಿಗೆ ನಾನು ಈ ಸಂದರ್ಭದಲ್ಲಿ ಕ್ಷಮೆ ಕೋರಲು ಇಚ್ಚಿಸುತ್ತೇನೆ. ಅವರ ಜತೆ ಕೆಲಸ ಮಾಡಿದ್ದು ಅವಿಸ್ಮರಣೀಯ. ಅರ್ಧದಲ್ಲೇ ರಾಜೀನಾಮೆ ನೀಡಿ ಹೋಗುತ್ತಿರುವುದಕ್ಕೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ. ದೇಶದ ಸಂವಿಧಾನದ ಮೂಲ ಆಶಯಗಳು ಹಾದಿ ತಪ್ಪುತ್ತಿರುವ ಈ ದಿನಗಳಲ್ಲಿ ನಾನು ಭಾರತೀಯ ಆಡಳಿತಾತ್ಮಕ ಸೇವೆಯಲ್ಲಿ ಮುಂದುವರೆಯುವುದು ನನಗೆ ಸಮಂಜಸವೆನಿಸುತ್ತಿಲ್ಲ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ನಮ್ಮ ಪ್ರಜಾಪ್ರಭುತ್ವದ ತಳಹದಿ ಕುಸಿಯುತ್ತಿರುವಾಗ ನೈತಿಕವಾಗಿ ನನಗೆ ಈ ವೃತ್ತಿಯಲ್ಲಿ ಇರಲು ಇಷ್ಟವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ವಿಷಮಯ ಸ್ಥಿತಿ ಇನ್ನಷ್ಟು ಉಲ್ಬಣವಾಗಲಿದೆ. ನಾನು ಐಎಎಸ್​ ವೃತ್ತಿಯ ಆಚೆಗಿದ್ದರೆ ದೇಶದ ಅಭಿವೃದ್ಧಿಗಾಗಿ, ಜನರಿಗಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡಬಹುದು. ಎಲ್ಲಾ ಅದರಪಾಡಿಗೆ ಆಗಲಿ ಎಂದು ಸುಮ್ಮನಾಗಲು ಇನ್ನು ಸಾಧ್ಯವಿಲ್ಲ. ಇನ್ನೊಮ್ಮೆ ನನ್ನ ಜತೆ ಕೆಲಸ ಮಾಡಿದ ಎಲ್ಲರಿಗೂ, ರಾಜ್ಯದ ಜನರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಸಹೋದ್ಯೋಗಿಗಳು ಮತ್ತು ಅವರ ಕುಟುಂಬಸ್ಥರು ಸಂತಸದಿಂದಿರಲಿ ಎಂದು ಆಶಯಿಸುತ್ತೇನೆ. : - - .