ರಾಜಭವನದ ಸುತ್ತ ಟೈಟ್ ಸೆಕ್ಯುರಿಟಿ: ಭದ್ರತೆ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್.. ಬೆಂಗಳೂರು, ಜು.26,2019(..): ರಾಜ್ಯದ ನೂತನ ಸಿಎಂ ಆಗಿ ಇಂದು ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಹಿನ್ನೆಲೆ ರಾಜಭವನದ ಸುತ್ತ ಬಿಗಿ ಭದ್ರತೆ ಮಾಡಲಾಗಿದೆ. ಸಂಜೆ 6 ಗಂಟೆಗೆ ರಾಜಭವನದಲ್ಲಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದು ಹೀಗಾಗಿ ಒಂದು ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಇನ್ನು ವಿಧಾನಸೌಧ ಹಾಗೂ ರಾಜಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಹಿನ್ನೆಲೆ ಸಾರ್ವಜನಿಕರು ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸ್ ಪ್ರಕಟಣೆ ಸೂಚಿಸಿದೆ. ರಾಜಭವನ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಸಮಾರಂಭಕ್ಕೆ ಆಗಮಿಸುವ ಗಣ್ಯರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ರಾಜಭವನದ ಸುತ್ತಮುತ್ತಲಿನ ಭದ್ರತೆಯನ್ನ ಪರಿಶೀಲಿಸಿದರು. ಬಿ.ಎಸ್ ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ನಾಯಕರು, ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ ಇಡಿ ವ್ಯವಸ್ಥೆ ಮಾಡಲಾಗಿದೆ. : - –- - -