ಸಿಎಂ ಹೆಚ್.ಡಿಕೆಯಿಂದ ವಿಶ್ವಾಸಮತಯಾಚನೆ: ನೂರಕ್ಕೆ ನೂರು ನಾವೇ ಗೆಲ್ಲುತ್ತೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ಬೆಂಗಳೂರು,ಜು,18,2019(..): ನೂರಕ್ಕೆ ನೂರು ನಾವೇ ಗೆಲ್ಲಿತ್ತೇವೆ. ವಿಶ್ವಾಸಮತದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಸೋಲಾಗಲಿದೆ. ಜನ ಬೆಂಬಲ ನಮಗಿದ್ದು ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾತನಾಡಿದ ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ, ನಾವು 105 ಮಂದಿ ಶಾಸಕರಿದ್ದೇವೆ. ಇಬ್ಬರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಿರುವುದರಿಂದ ನಮ್ಮ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. 16 ಮಂದಿ ಶಾಸಕರು ರಾಜೀನಾಮೆ ಕೊಟ್ಟಿರುವುದು ಹಾಗೂ ಇಬ್ಬರು ಶಾಸಕರು ಬೆಂಬಲ ಹಿಂತೆಗೆದುಕೊಂಡಿರುವುದರಿಂದ ಸಮ್ಮಿಶ್ರ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ಹೇಳಿದರು. ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳುತ್ತಾರೋ ಕಾದು ನೋಡಬೇಕು. ವಿಶ್ವಾಸ ಮತಯಾಚನೆ ನಿರ್ಣಯವನ್ನು ನೇರವಾಗಿ ಮತಕ್ಕೆ ಹಾಕುವರೋ ಇಲ್ಲವೇ ಚರ್ಚೆಗೆ ಕೊಡುವರೋ ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು. ವಿಶ್ವಾಸ ಮತಯಾಚನೆಯಲ್ಲಿ ಸಮ್ಮಿಶ್ರ ಸರ್ಕಾರ ಸೋಲುತ್ತದೆ. ನೂರಕ್ಕೆ ನೂರು ನಾವೇ ಗೆಲ್ಲುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. : - - -