ಇಂದು ಕೇಂದ್ರ ಬಜೆಟ್: ರಾಷ್ಟ್ರಪತಿ ರಮನಾಥ್ ಕೋವಿಂದ್ ಭೇಟಿಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.. ನವದೆಹಲಿ, ಜುಲೈ 5,2019(..): ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಎರಡನೆಯ ಬಾರಿಗೆ ಅಧಿಕಾರಕ್ಕೇರಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ಅನ್ನು ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರನ್ನ ಭೇಟಿಯಾಗಿ ಬಜೆಟ್ ಗೆ ಅನುಮೋದನೆ ಪಡೆದಿದ್ದಾರೆ. ಈ ಬಳಿಕ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಲಿದೆ. ನಂತರ 10.30ಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. ಇದಾದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2019-20ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇವುಗಳಲ್ಲಿ ಜಿಡಿಪಿ ಪ್ರಗತಿ, 2025ಕ್ಕೆ ಭಾರತವನ್ನು 5 ಟ್ರಿಲಿಯನ್ ಆರ್ಥಿಕತೆಯ ದೇಶವನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯನ್ನು ಈಡೇರಿಸಲು ತೆಗೆದುಕೊಳ್ಳುವ ಕ್ರಮಗಳು, ತೆರಿಗೆ ಸಂಗ್ರಹದಲ್ಲಿನ ಬದಲಾವಣೆಗಳು, ಕೃಷಿ ಕ್ಷೇತ್ರಕ್ಕೆ ಆದ್ಯತೆ, ರೈಲ್ವೆ ಯೋಜನೆಗಳು, ನಿರುದ್ಯೋಗ ಸಮಸ್ಯೆಗೆ ಪರಿಹಾರ, ಆರೋಗ್ಯ, ಮೂಲಭೂತ ಸೌಕರ್ಯದ ವೃದ್ಧಿ ಸೇರಿದಂತೆ ಇತರೆ ಅನೇಕ ಅಂಶಗಳು ಸೇರಿಕೊಂಡಿವೆ. : -- - - – .