ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದ್ ಸಿಂಗ್ ಬಳ್ಳಾರಿ:ಜುಲೈ-1:(..) ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಅಸಮಾಅಧಾನದ ಬೇಗುದಿ ಭುಗಿಲೆದ್ದಿದ್ದು, ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಮೆರಿಕಾ ಪ್ರವಾಸದಲ್ಲಿರುವಾಗಲೇ ಇತ್ತ ಆನಂದ್ ಸಿಂಗ್ ದಿಢೀರ್ ರಾಜೀನಾಮೆ ನಿಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಆನಂದ್​ ಸಿಂಗ್​ ಸ್ಪೀಕರ್​ ರಮೇಶ್​ ಕುಮಾರ್​ ಅವರ ದೊಮ್ಮಲೂರಿನ ನಿವಾಸಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಆನಂದ್ ಸಿಂಗ್ ಬೆನ್ನಲ್ಲೇ ಇನ್ನೂ 7 ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈಗಲ್ಟನ್​ ರೆಸಾರ್ಟ್​ನಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಕಂಪ್ಲಿ ಗಣೇಶ್​ ಅವರನ್ನು ಕೆಪಿಸಿಸಿ ಅಮಾನತು ಮಾಡಿತ್ತು. ಆ ನಂತರ ಅವರ ಅಮಾನತನ್ನು ವಾಪಸ್​ ಪಡೆಯಲಾಗಿತ್ತು. ಜತೆಗೆ ಜಿಂದಾಲ್​ ಭೂಮಿ ಪರಭಾರೆ ವಿಷಯದಲ್ಲಿ ತಮ್ಮನ್ನು ಕಡೆಗಣನೆ ಮಾಡಲಾಗಿದೆ. ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್​ ಅವರು ಹಿಡಿತ ಸಾಧಿಸಿರುವ ಕುರಿತು ಆನಂದ್​ ಸಿಂಗ್​ ಬೇಸರಗೊಂಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.