ಆತುರಪಟ್ಟು ಆತ್ಮಹತ್ಯೆಯ ದಾರಿ ಹಿಡಿಯಬೇಡಿ: ರೈತರಿಗೆ ಅಭಯ: ಗ್ರಾಮವಾಸ್ತವ್ಯದ ಬಗ್ಗೆ ಬಿಜೆಪಿ ಟೀಕೆಗೆ ಉತ್ತರ ಕೊಟ್ಟ ಸಿಎಂ ಹೆಚ್.ಡಿ ಕುಮಾರಸ್ವಾಮಿ… ಮಂಡ್ಯ,ಜೂ,18,2019(..): ಆತುರಪಟ್ಟು ಆತ್ಮಹತ್ಯೆಯ ದಾರಿಯನ್ನ ರೈತರು ಹಿಡಿಯಬಾರದು. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಎಂತಹದ್ದೇ ಕಷ್ಟ ಇದ್ದರೂ ಧೈರ್ಯದಿಂದ ಬದುಕುವ ಛಲ ಬೆಳೆಸಿಕೊಳ್ಳಿ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ರೈತರಿಗೆ ಅಭಯ ನೀಡಿದರು. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ಮೃತ ರೈತ ಸುರೇಶ್ ನಿವಾಸಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ 5.ಲಕ್ಷ ರೂ ಪರಿಹಾರ ಚೆಕ್ ವಿತರಿಸಿದರು. ಮೃತ ಸುರೇಶ್ ಪುತ್ರನಿಗೆ ಕೆಲಸ ಹಾಗೂ ಪುತ್ರಿಯ ವಿದ್ಯಾಭ್ಯಾಸಕ್ಕೆ ನೆರವು ನೀಡುವುದಾಗಿ ಘೋಷಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಆತ್ಮಹತ್ಯೆಯೇ ಕೊನೆಯಲ್ಲ. ಕುಟುಂಬದ ಪರಿಸ್ಥಿತಿಯನ್ನ ಸ್ವಲ್ಪ ಗಮನಿಸಿ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಎಂತಹದ್ದೇ ಕಷ್ಟ ಇದ್ದರೂ ಧೈರ್ಯದಿಂದ ಬದುಕುವ ಛಲ ಬೆಳೆಸಿಕೊಳ್ಳಿ ಎಂದು ಧೈರ್ಯ ಹೇಳಿದರು. ರಾಜ್ಯದ ಎಲ್ಲಾ ಕಡೆ ಕೆರೆಗಳನ್ನ ತುಂಬಿಸುವ ಕೆಲಸ ಆಗಬೇಕಿದೆ. ಸುರೇಶ್ ಕೆರೆಗಳನ್ನ ತುಂಬಿಸಿ ಎಂದು ಮನವಿ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ 213ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನ ತುಂಬಿಸುವ ಕಾರ್ಯ ಆರಂಭವಾಗಲಿದೆ. ಹೀಗಾಗಿ ಯಾರೂ ಸಹ ಆತುರಪಟ್ಟು ಆತ್ಮಹತ್ಯೆಯ ದಾರಿಯನ್ನ ರೈತರು ಹಿಡಿಯಬಾರದು ಎಂದು ತಿಳಿಸಿದರು. ಸಾಲ ಮನ್ನಾ ಶಾಶ್ವತ ಪರಿಹಾರವಲ್ಲ. ಖಾಸಗಿ ಬಡ್ಡಿ ವ್ಯವಹಾರ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಖಾಸಗಿ ಸಾಲಗಾರರ ಹಾವಳಿ ಕಡಿವಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಕೇರಳ ಮಾದರಿ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದ್ದು, ಈಗಾಗಲೇ ಅದರ ಮಾಹಿತಿ ತರಿಸಿಕೊಂಡಿದ್ದೇನೆ. ಮುಂದಿನ ವಿಧಾನ ಸಭೆಯಲ್ಲಿ ಚರ್ಚಿಸಿ, ಆ ಬಿಲ್ ತರಲು ಚಿಂತನೆ ನಡೆಸಲಾಗಿದೆ ಎಂದು ಸಿಎಂ ಹೆಚ್.ಡಿಕೆ ಮಾಹಿತಿ ನೀಡಿದರು. ನಾನು ಗಿಮಿಕ್ ಗಾಗಿ ಗ್ರಾಮವಾಸ್ತವ್ಯ ಮಾಡ್ತಿಲ್ಲ. ಇದೇ ವೇಳೆ ಗ್ರಾಮವಾಸ್ತವ್ಯದ ಬಗ್ಗೆ ಬಿಜೆಪಿ ಟೀಕೆಗೆ ಉತ್ತರ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾನು ಹಳ್ಳಿಯ ಜನರಿಗೆ ಧೈರ್ಯ ತುಂಬಲು ಗ್ರಾಮವಾಸ್ತವ್ಯ ಮಾಡಲು ಮುಂದಾಗಿದ್ದೇನೆ. ನಾನು ಗಿಮಿಕ್ ಗಾಗಿ ಗ್ರಾಮವಾಸ್ತವ್ಯ ಮಾಡ್ತಿಲ್ಲ. ಗಿಮಿಕ್ ಅಂತ ಯಡಿಯೂರಪ್ಪ ಹೇಳುತ್ತಾರೆ. ನಾನು ಎಲ್ಲಾ ಜಿಲ್ಲಾಧಿಕಾರಿಗಳಿಂದ ಗ್ರಾಮಗಳ ಮಾಹಿತಿ ಪಡೆದಿದ್ದೇನೆ. ಗ್ರಾಮವಾಸ್ತವ್ಯ ಬೇಡ, ಬರಪರಿಹಾರ ಅಧ್ಯಯನ ಮಾಡಿ ಅಂತಾರೆ ಬಿಜೆಪಿ ಅವರು. ನಾನು ಸ್ಟಾರ್ ಹೋಟೆಲ್ ನು ನೋಡಿದ್ದೇನೆ, ಸಣ್ಣ ಹಳ್ಳಿಯಲ್ಲೂ ವಾಸ್ತವ್ಯ ಹೂಡಿದ್ದೇನೆ ಎಂದು ತಿರುಗೇಟು ನೀಡಿದರು. : ’ # # # # #