ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಆಹ್ವಾನ ತಿರಸ್ಕಾರ: ಕಾಂಗ್ರೆಸ್ ನಡೆ ಟೀಕಿಸಿದ ಮಾಜಿ ಸಿಎಂ ಬಿಎಸ್ ವೈ. ಬೆಂಗಳೂರು,ಜನವರಿ,11,2024(..):ಜನವರಿ 22ರ ರಾಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಮಲಲ್ಲಾ ಟ್ರಸ್ಟ್ ಕೊಟ್ಟಿದ್ದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ನಡೆಗೆ ಮಾಜಿ ಸಿಎಂ ಬಿಎಸ್ ಯಡಿಯೂರ‍ಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ವೈ, ಕಾಂಗ್ರೆಸ್ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ಖುದ್ದು ಟ್ರಸ್ಟ್‍ನವರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾಗಾಂಧಿಯವರಿಗೆ ಆಹ್ವಾನ ಪತ್ರ ನೀಡಿದ್ದರು. ಆದರೆ ಕುಂಟು ನೆಪ ಹೇಳಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಗೈರಾಗುವುದು ಹಿಂದೂಗಳಿಗೆ ಮಾಡಿದ ಅಪಮಾನ. ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ. ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ. ಕಾಂಗ್ರೆಸ್ಸಿಗರು ಯಾವ ಕಾರಣಕ್ಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಬಿಎಸ್ ವೈ ಆಗ್ರಹಿಸಿದರು. ಕಾಂಗ್ರೆಸ್ ನಾಯಕರು ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ಬಿಎಸ್ ವೈ ಕಿಡಿಕಾರಿದರು. : – -- -- -