ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ. ನವದೆಹಲಿ, ಅಕ್ಟೋಬರ್ 30,2023(..):ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಜಲಾಶಯಗಳು ಭರ್ತಿಯಾಗದೇ ಬರಪರಿಸ್ಥಿತಿ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ನಡುವೆಯೇ ಇದೀಗ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಕರ್ನಾಟಕಕ್ಕೆ ಸೂಚನೆ ನೀಡಿದೆ. ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಜಲಾಶಯ ಬರಿದಾಗುತ್ತಿದ್ದರೂ ಸಹ ಇದೀಗ ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳ ಕಾಲ ಅಂದರೇ ನವೆಂಬರ್ 1ರಿಂದ 15ರವರೆಗೆ 2,600 ಕ್ಯೂಸೆಕ್​ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕದ ಪರ ಎಸಿಎಸ್ ರಾಕೇಶ್ ಸಿಂಗ್ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಭಾಗವಹಿಸಿ ವಾದ ಮಂಡಿಸಿದ್ದಾರೆ. ಪ್ರತಿದಿನ 3 ಸಾವಿರ ಕ್ಯೂಸೆಕ್​ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಈ ಹಿಂದೆ ಸೂಚಿಸಿತ್ತು. ಅಕ್ಟೋಬರ್ ಅಂತ್ಯದ ವರೆಗೆ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ, ಕರ್ನಾಟಕ ಸದ್ಯ ರಾಜ್ಯದ ಜನರ, ರೈತರ ವಿರೋಧದ ಮಧ್ಯೆಯೂ ತಮಿಳುನಾಡಿಗೆ ನೀರು ಹರಿಸುತ್ತಿದೆ. : - - - – – .