ಸ್ತಬ್ದ ಚಿತ್ರ ಪ್ರದರ್ಶನ, ಕಲಾತಂಡಗಳ ಮೆರಗು, : ಐತಿಹಾಸಿಕ ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಿಕ್ಕಿರಿದು ಸೇರಿದ ಜನರು.. ಮೈಸೂರು,ಅಕ್ಟೋಬರ್,24,2023(..):ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯನ್ನ ಕಣ್ತುಂಬಿಕೊಳ್ಳಲು ಸಾಂಸ್ಕೃತಿಕ ನಗರಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದಾರೆ. ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿಯನ್ನ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಪಥದಲ್ಲಿ ಹೆಜ್ಜೆಹಾಕಲಿದ್ದು ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಅರಮನೆಯಿಂದ ಹೊರಡಲಿರುವ ಜಂಬೂ ಸವಾರಿ ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿ ಮೀ ಜಂಬೂ ಸವಾರಿ ನಡೆಯಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಜಂಬೂಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿರುವ ಅಭಿಮನ್ಯುಗೆ , ವಿಜಯ, ವರಲಕ್ಷ್ಮೀ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮೀ, ಹಿರಣ್ಯ ಆನೆಗಳು ಸಾಥ್ ನೀಡಲಿವೆ. ಜಂಬೂಸವಾರಿ ಮೆರವಣಿಗೆಯಲ್ಲಿ 49 ಸ್ತಬ್ದಚಿತ್ರಗಳು ಪ್ರದರ್ಶನವಾಗುತ್ತಿದ್ದು ಅರಮನೆ ಅವರಣದಲ್ಲಿ ಕಲಾತಂಡಗಳು ಮೆರಗು ಹೆಚ್ಚಿಸಿವೆ. ವೀರಗಾಸೆ ಡೊಳ್ಳುಕುಣಿತ, ಕಂಸಾಳೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿವೆ. ಈಗಾಗಲೇ ಅಭಿಮನ್ಯುವಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭವಾಗಿದೆ. ದಸರಾ ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಕಿಕ್ಕಿರಿದು ಸೇರಿದ್ದು, ಪೊಲೀಸ್ ಭದ್ರತೆ ವಹಿಸಲಾಗಿದೆ. : -- -