ಮೈಸೂರಿನ ಚಾಮುಂಡೇಶ್ವರಿ ದೇಗುಲದ ಚರ-ಸ್ಥಿರಾಸ್ತಿಗಳಲ್ಲಿ ಯಾವ ಬದಲಾವಣೆ ಮಾಡದಿರಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ಬೆಂಗಳೂರು, ಸೆಪ್ಟೆಂಬರ್ 05, 2024 (..):ಮೈಸೂರಿನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕ ಸದಸ್ಯ ಪೀಠ, ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ನಿರ್ದೇಶನ ನೀಡಿತು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರು ಮೇಲಿನ ಸೂಚನೆ ನೀಡಿದರು. ಮೊನ್ನೆಯಷ್ಟೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದರು. ‘’ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ಕ್ಷೇತ್ರದ ಆಸ್ತಿ, ವಜ್ರ ವೈಢೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ. ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ. ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ವೇಗವಾಗಿ ಬದಲಾವಣೆ ತರಲಾಗುತ್ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು’’ ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್. ದೇವದಾಸ್ ವಾದ ಮಂಡಿಸಿದರು. ವಾದ-ಪ್ರತಿ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದರು. ಅಲ್ಲಿವರೆಗೆ ದೇಗುಲದ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕ ನಿರ್ದೇಶನ ನೀಡಿದರು. : . .