ಕಾವೇರಿ ನೀರಿಗಾಗಿ ಆಗ್ರಹಿಸಿ ಅಖಂಡ ಕರ್ನಾಟಕ ಬಂದ್: ಬೀದಿಗಳಿದು ಪ್ರತಿಭಟನೆ, ರಾಜ್ಯದಲ್ಲಿ ಸಂಪೂರ್ಣ ಸ್ತಬ್ದ. ಬೆಂಗಳೂರು,ಸೆಪ್ಟಂಬರ್,29,2023(..):ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ತಲೆದೂರಿದ್ದು ಹೀಗಿದ್ದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇಂದು ರಾಜ್ಯ ಸಂಪೂರ್ಣ ಸ್ತಬ್ಧವಾಗಿದೆ. ಕಾವೇರಿ ನೀರಿಗಾಗಿ ಆಗ್ರಹಿಸಿ ಬೆಂಗಳೂರು, ಮಂಡ್ಯ, ಮೈಸೂರು ಹಾಸನ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲೂ ಹೋರಾಟ ತೀವ್ರಗೊಂಡಿದ್ದು, ವಿವಿಧ ರೈತ, ಕನ್ನಡಪರ ಸಂಘಟನೆಗಳು ಬೀದಿಗಿಳಿದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿವೆ. ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಬಂದ್​​ಗೆ ಕರೆ ನೀಡಿದ್ದು, ಇದಕ್ಕೆ 1900ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್‌ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.. ರಾಜ್ಯ ರೈತ ಸಂಘ, ಚಲನಚಿತ್ರ ವಾಣಿಜ್ಯ ಮಂಡಳಿ ಮಾತ್ರವಲ್ಲದೆ, ಜನಜೀವನದ ಮೇಲೆ ಪರಿಣಾಮ ಬೀರುವ ಬೀದಿಬದಿ ವ್ಯಾಪಾರ, ಹೊಟೆಲ್ ಸಂಘಟನೆ ಸಹಮತ ಘೋಷಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ತಿಳಿಸಿವೆ. ಇನ್ನು, ಸಾರಿಗೆ ನೌಕರರು, ಕಟ್ಟಡ ಕಾರ್ಮಿಕರು, ಎಪಿಎಂಸಿ ಕಾರ್ಮಿಕರ ಸಂಘ, ವಕೀಲರ ಸಂಘಗಳು ತಮ್ಮ ಕಾರ್ಯ ಕಲಾಪದಲ್ಲಿ ತೊಡಗಿ ನೈತಿಕ ಬೆಂಬಲ ನೀಡಿವೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬಂದ್ ನೆಪದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಗೆ ಮುಂದಾದಲ್ಲಿ‌ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಗರದ ಪ್ರಮುಖ ಜಂಕ್ಷನ್​ಗಳು, ವೃತ್ತಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. : – --