ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿಂದ ರಾಜಕೀಯ- ಸಿಎಂ ಸಿದ್ದರಾಮಯ್ಯ. ಬೆಂಗಳೂರು, ಸೆಪ್ಟೆಂಬರ್ ,25,2023(..):ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಹಾಗೆ ಹೇಳಲಿಲ್ಲವಲ್ಲ. ಸರ್ವಪಕ್ಷ ಸಭೆಯಲ್ಲಿ ನನ್ನ ರಾಜೀನಾಮೆ ಕೇಳದ ಬಿಜೆಪಿ ಈಗ ಕೇಳುತ್ತಿರುವುದರ ಹಿಂದೆ ರಾಜಕೀಯವಿದೆ ಎಂದು ಕಿಡಿಕಾರಿದರು. ಪ್ರತಿಭಟನೆಗೆ ಅವಕಾಶವಿದೆ ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ‍್ಧರಾಮಯ್ಯ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ತಿಳಿಸಿದರು. ಇನ್ನಷ್ಟು ಬಲವಾಗಿ ವಾದ ಮಂಡನೆ ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ. ತಮಿಳುನಾಡು 24,000 ಕ್ಯೂಸೆಕ್ಸ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು 5000 ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ. ಪುನಃ ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದರು. : - – – -