ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಮಂಡ್ಯ ಜಿಲ್ಲೆ ಬಂದ್: ಅಂಗಡಿ, ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಕ ಬೆಂಬಲ. ಮಂಡ್ಯ,ಸೆಪ್ಟಂಬರ್, 23,2023(..):ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸ್ಥಿತಿ ನಿರ್ಮಾಣವಾಗಿದ್ದರೂ ಸಹ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನ ಖಂಡಿಸಿ ಇಂದು ಮಂಡ್ಯ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಇಂದು ಮಂಡ್ಯ ನಗರ ಬಂದ್​ಗೆ ರೈತ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಮಂಡ್ಯ ನಗರ ಬಂದ್ ಮಾಡಲಾಗುತ್ತಿದೆ. ಆಟೋ, ಖಾಸಗಿ ಬಸ್, ಶಾಲಾ ಕಾಲೇಜುಗಳ ಬಂದ್​ಗೂ ಮನವಿ ಮಾಡಲಾಗಿದೆ. ಇಂದು ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲಿನ ಬೂತ್​ ಮಾತ್ರ ಓಪನ್ ಇರಲಿದೆ. ನಗರದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಂಜಯ ವೃತ್ತ, ಮಹಾವೀರ ವೃತ್ತ, ವಿವಿ ರೋಡ್, ಡಬಲ್ ರೋಡ್ ಸೇರಿ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಯುತ್ತಿದೆ. ಮಂಡ್ಯ ನಗರದಾದ್ಯಂತ ಇಂದು ರೈತರು ಬೈಕ್ ರ್ಯಾಲಿ ನಡೆಯಲಿದ್ದು. ಇನ್ನು ಮತ್ತೊಂದೆಡೆ ಮಂಡ್ಯದಲ್ಲಿ ರೈತರ ಪ್ರತಿಭಟನೆಗೆ ಜೆಡಿಎಸ್​, ಬಿಜೆಪಿ ನಾಯಕರು ಸಾಥ್​​​​ ನೀಡಲಿದ್ದಾರೆ. ಮಂಡ್ಯ ರಕ್ಷಣಾ ವೇದಿಕೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸಂಜಯ್ ವೃತ್ತದಲ್ಲಿ ರಸ್ತೆಯಲ್ಲಿ ಟೀ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಸುಟ್ಟು ಟೀ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಮಂಡ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್​ಗೆ ವರ್ತಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ‌ ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. : – - - -