ಉದಯನಿಧಿ ಸ್ಟಾಲಿನ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು. ಬೆಂಗಳೂರು,ಸೆಪ್ಟಂಬರ್,6,2023(..):ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಹೇಳಿಕೆ ನೀಡಿದ್ದ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಅವರ ಹೇಳಿಕೆಗೆ ಬೆಂಬಲಿಸಿ ಟ್ವಿಟ್ ಮಾಡಿದ್ದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಗನಾಗಿರುವ ಉದಯನಿಧಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್​ಐಆರ್ ದಾಖಲಾಗಿದೆ. ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ‘ಸನಾತನ ಧರ್ಮ’ ಹೇಳಿಕೆ ಕುರಿತು ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಕುರಿತು ನೀಡಿದ್ದ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದ ಸಚಿವ ಪ್ರಿಯಾಂಕ್‌ ಖರ್ಗೆ, ಮನುಷ್ಯನ ಘನತೆಯನ್ನು ಎತ್ತಿಹಿಡಿಯದ, ಸಮಾಜದಲ್ಲಿ ಸಮಾನತೆಯನ್ನು ಸಾರದ ಯಾವುದೇ ಒಂದು ಧರ್ಮ ಧರ್ಮವೇ ಅಲ್ಲ. ಸಮಾನ ಹಕ್ಕುಗಳನ್ನು ನೀಡದ ಮತ್ತು ಮನುಷ್ಯರನ್ನು ಮನುಷ್ಯರಂತೆ ನಡೆಸಿಕೊಳ್ಳದೆ ಕೀಳಾಗಿ ಕಾಣುವ ಧರ್ಮ ರೋಗದಷ್ಟೇ ಕೆಟ್ಟದ್ದು ಎಂದಿದ್ದರು. ಉದಯನಿಧಿ ಸ್ಟಾಲಿನ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು. ಸನಾತನ ಧರ್ಮದ ಹೇಳಿಕೆ ಖಂಡಿಸಿ ಉದಯನಿಧಿ ಸ್ಟಾಲಿನ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಶ್ರೀರಾಮಸೇನೆ ಕಾರ್ಯಕರ್ತರು ದೂರು ನೀಡಿದ್ದಾರೆ. ಸನಾತನ ಧರ್ಮದ ಬಗ್ಗೆ ಹೇಳಿಕೆಗೆ ಕ್ಷಮೆ ಕೇಳದಿದ್ರೇ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. : – -- – - .