ಎರಡು ರಾಷ್ಟ್ರೀಯ ಪಕ್ಷಗಳು ಈಗ ಈಸ್ಟ್ ಇಂಡಿಯಾ ಕಂಪನಿಯ ಸ್ಥಾನ ತುಂಬುತ್ತಿವೆ- ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ. ಬೆಂಗಳೂರು,ಆಗಸ್ಟ್,15,2023(..):ಈಗ ಈಸ್ಟ್ ಇಂಡಿಯಾ ಕಂಪನಿಗಳು ಭಾರತದಲ್ಲೇ ಹುಟ್ಟಿಕೊಂಡಿವೆ. ಎರಡು ರಾಷ್ಟ್ರೀಯ ಪಕ್ಷಗಳು ಅದರ ಸ್ಥಾನ ತುಂಬುತ್ತಿವೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಜೆ.ಪಿ ಭವನದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ದೇಶದ ಆರ್ಥಿಕತೆ ಮೂರನೇ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಪ್ರಜೆಗಳು ಕಾರಣವೇ ಹೊರತು ಸರ್ಕಾರವಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಈಗ ಈಸ್ಟ್ ಇಂಡಿಯಾ ಕಂಪನಿಯ ಸ್ಥಾನ ತುಂಬುತ್ತಿವೆ. ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದ್ದರೂ ಮೌನವಾಗಿ ನೋಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಾರ್ಯಕರ್ತರು ಹೋರಾಟ ಮಾಡಬೇಕು ಎಂದು ಕರೆ ನೀಡಿದರು. ಇದೇ ವೇಳೆ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ವ್ಯಕ್ತಪಡಿಸಿದ ಹೆಚ್.ಡಿ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳು ಸಮಾನತೆ ತರುತ್ತಿವೆ ಎಂದು ಹೇಳುತ್ತಿದ್ದಾರೆ. ದುಡಿಯುವ ಕೈಗಳಿಗೆ ಶಕ್ತಿ ತುಂಬದ ಈ ಯೋಜನೆಗಳು ಯಾವ ರೀತಿ ಸಮಾನತೆ ತರುತ್ತವೆ? ಎಂದು ಹೆಚ್.ಡಿಕೆ ಪ್ರಶ್ನಿಸಿದರು. : - - – - -