ಮುಡಾ ವಿಚಾರದಲ್ಲಿ ಷಡ್ಯಂತ್ರ: ತಮ್ಮ ಬೆಂಬಲಕ್ಕೆ ನಿಂತ ಎಲ್ಲಾ ಸ್ವಾಮೀಜಿಗಳಿಗೆ ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಆಗಸ್ಟ್,26,2024 (..):ಮುಡಾ ವಿಚಾರದಲ್ಲಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಹೊರಟಿರುವ ಎದುರಾಳಿಗಳ ಕುಟಿಲ ಕಾರಸ್ಥಾನವನ್ನು ಅರ್ಥಮಾಡಿಕೊಂಡು ನೈತಿಕವಾಗಿ ನನ್ನ ಬೆಂಬಲಕ್ಕೆ ನಿಂತಿರುವ ಎಲ್ಲಾ ಸ್ವಾಮೀಜಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮುಡಾ ವಿಚಾರದಲ್ಲಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಹೊರಟಿರುವ ಎದುರಾಳಿಗಳ ಕುಟಿಲ ಕಾರಸ್ಥಾನವನ್ನು ಅರ್ಥಮಾಡಿಕೊಂಡು ನೈತಿಕವಾಗಿ ನನ್ನ ಬೆಂಬಲಕ್ಕೆ ನಿಂತಿರುವ, ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು, ಕನಕ ಪೀಠ ಕಾಗಿನೆಲೆ. ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ. ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಭೋವಿ ಗುರುಪೀಠ ಚಿತ್ರದುರ್ಗ. ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಮಾದರ ಚನ್ನಯ ಗುರುಪೀಠ ಚಿತ್ರದುರ್ಗ. ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗಿರಥ ಪೀಠ ಮಧುರೆ. ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ. ಶ್ರೀ ರೇಣುಕಾನಂದ ಸ್ವಾಮಿಗಳು, ನಾರಾಯಣ ಗುರುಪೀಠ ಶಿವಮೊಗ್ಗ. ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಮಡಿವಾಳ ಗುರುಪೀಠ ಚಿತ್ರದುರ್ಗ. ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ. ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು, ಸರೂರು ವಿಜಯನಗರ ಈ ಎಲ್ಲಾ ಪೂಜ್ಯ ಮಠಾಧೀಶರಿಗೆ ಧನ್ಯವಾದಗಳು. ಮೇಲ್ನೋಟಕ್ಕೆ ಇದು ರಾಜಕೀಯ ಸಂಘರ್ಷವೆನಿಸಿದರೂ ಆಂತರ್ಯದಲ್ಲಿ ಹಿಂದುಳಿದ ಜಾತಿಗೆ ಸೇರಿದ ನಾಯಕನೊಬ್ಬನ ಏಳಿಗೆ ಸಹಿಸದ ಪಟ್ಟಭದ್ರರು ಕುತಂತ್ರದಿಂದ ಹೆಣೆದ ಷಡ್ಯಂತ್ರ ಎಂಬುದು ಸೂರ್ಯ ಚಂದ್ರರಷ್ಟೇ ಸತ್ಯ. ಬುದ್ಧ, ಬಸವ, ಬಾಬಾ ಸಾಹೇಬ್, ಕನಕದಾಸರು, ನಾರಾಯಣ ಗುರುಗಳ ಆಶಯದಂತೆ ಸಮಸಮಾಜದ ಸ್ಥಾಪನೆಗಾಗಿ, ಶೋಷಿತ, ಅವಕಾಶ ವಂಚಿತ, ದೀನ ದಲಿತ, ಬಡಜನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ನಾನು ಪಟ್ಟಭದ್ರ ಹಿತಾಸಕ್ತಿಗಳಿಗೆ ಕಳೆದ 40 ವರ್ಷಗಳಿಂದ ಬಹುದೊಡ್ಡ ಸವಾಲಾಗಿದ್ದೇನೆ. ನನ್ನನ್ನು ಮೂಲೆಗೆ ಸರಿಸುವ ಮೂಲಕ ಸಮಾಜದ ಬಹುಸಂಖ್ಯಾತ ಜನರ ಧ್ವನಿಯನ್ನು ಅಡಗಿಸುವ ಪ್ರಯತ್ನ ಇಂದು ನಡೆಯುತ್ತಿದೆ. ಬಹಳಷ್ಟು ಮಂದಿ ಪೂಜ್ಯ ಸ್ವಾಮೀಜಿಗಳು ಇದನ್ನು ಅರಿತು ನನ್ನ ಬೆಂಬಲಕ್ಕೆ ನಿಂತು, ಇಡೀ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಸತ್ಯ ನನ್ನ ಜತೆ ಇದೆ, ಸತ್ಯದ ಜತೆ ನಾನಿದ್ದೇನೆ ಎಂದು ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. : , , , ,