ಸಿಎಂ ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ- ಶಾಸಕ ಜಿ.ಟಿ ದೇವೇಗೌಡ. ಬೆಂಗಳೂರು,ಮೇ,24,2023(..):ರಾಜ್ಯ ವಿಧಾನಸಭೆ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಜಿಟಿ ದೇವೇಗೌಡರು, ಸಿಎಂ ಇಬ್ರಾಹಿಂ ರಾಜೀನಾಮೆ ನೀಡುವುದು ಬೇಡ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ, ಸಿ.ಎಂ.ಇಬ್ರಾಹಿಂ ಹಿರಿಯರಿದ್ದಾರೆ, ಸಾಕಷ್ಟು ಅನುಭವ ಹೊಂದಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಜತೆ ಮಾತನಾಡುತ್ತೇವೆ ಎಂದು ಹೇಳಿದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಕುರಿತು ಪ್ರತಿಕ್ರಿಯಿಸಿದ ಶಾಸಕ ಜಿ.ಟಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ್ದರಿಂದ ದಲಿತ ಸಮುದಾಯದ ಮತಗಳು ಕಾಂಗ್ರೆಸ್ ಗೆ ಹೋದವು. ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಸಮುದಾಯದ ಮತ ಸೆಳೆದರು. ಜೆಡಿಎಸ್ ಗೆ ಮತ ಹಾಕಿದರೇ ಬಿಜೆಪಿ ಜೊತೆ ಹೋಗುತ್ತಾರೆ ಎಂದು ಅಪಪ್ರಚಾರ ಮಾಡಿದರು. ಹೀಗಾಗಿ ಸೋಲಾಯಿತು. ಬಿಎಸ್ ಯಡಿಯೂರಪ್ಪರನ್ನ ನಿರ್ಲಕ್ಷಿಸಿದ್ದಕ್ಕೆ ಬಿಜೆಪಿ ಮಂಕಾಯಿತು ಎಂದು ತಿಳಿಸಿದರು. : – - - - - - .