ರಾಜ್ಯ ವಿಧಾನಸಭಾ ಚುನಾವಣೆ: ಹಲವು ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್. ಬೆಂಗಳೂರು,ಏಪ್ರಿಲ್,24,2023(..):ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಪಕ್ಷದಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡು ಬಂಡಾಯವಾಗಿ ಕಣಕ್ಕಿಳಿಯಲು ಮುಂದಾಗಿದ್ದ ಹಲವು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ತಮ್ಮ ತಮ್ಮ ಪಕ್ಷಗಳ ಹಿರಿಯ ನಾಯಕರು ಕೆಲ ಬಂಡಾಯ ಅಭ್ಯರ್ಥಿಗಳನ್ನ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು ಇದೀಗ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಚಿಕ್ಕಪೇಟೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರನ್ನ ಕಾಂಗ್ರೆಸ್ ನಾಯಕರು ಮನವೊಲಿಸಿದ್ದು ನಾಮಪತ್ರ ವಾಪಸ್ ಪಡೆದಿದ್ದಾರೆ. ಹಾಗೆಯೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ ಹಿನ್ನೆಲೆ ತನಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ಸ್ಪರ್ಧೆಗಿಳಿಯಲು ಮುಂದಾಗಿದ್ದ ಅಲ್ತಾಪ್ ಕಿತ್ತೂರು ಇದೀಗ ನಾಮಪತ್ರ ವಾಪಸ್ ಪಡೆದಿದ್ದಾರೆ. ಶಿರಹಟ್ಟಿ ರಾಮಣ್ಣ ಲಮಾಣಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ಟಿಕೆಟ್​ ಕೈ ತಪ್ಪಿದ ಹಿನ್ನೆಲೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದರು. ಬಿಜೆಪಿ ವರಿಷ್ಠರು ಮನವೊಲಿಕೆ ಹಿನ್ನೆಲೆ ಇಂದು ಶಾಸಕ‌ ಮಹಾದೇವಪ್ಪ ಯಾದವಾಡ ನಾಮ ಪತ್ರ ವಾಪಾಸ್ ಪಡೆದಿದ್ದಾರೆ. ಬೆಂಬಲಿಗರ ಕೈಯಲ್ಲಿ ಅರ್ಜಿಗೆ ಸಹಿ ಮಾಡಿ ಕೊಟ್ಟು ಕಳುಹಿಸಿ ನಾಮ ಪತ್ರ ವಾಪಾಸ್ ಪಡೆದಿದ್ದಾರೆ : –- – – - .