ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಲೋಕಾಯುಕ್ತಕ್ಕೆ ದೂರು. ಕಲಬುರಗಿ,ಡಿಸೆಂಬರ್,26,2022(..):ಜಿಲ್ಲಾಡಳಿತ ನೀಡಿದ್ದ ಭೂಮಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಎಂಬುವವರು ಕಲ್ಬುರ್ಗಿ ಲೋಕಾಯುಕ್ತಕ್ಕೆ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಂಬೇಡ್ಕರ್ ಸ್ಮಾರಕ ಸಮೀತಿಗೆ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 1981ರಲ್ಲಿ ಕಲಬುರಗಿ ಜಿಲ್ಲಾಡಳಿತವು 36 ಸಾವಿರ ಚದರ ಅಡಿ ಭೂಮಿ ನೀಡಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ಕಲ್ಯಾಣ ಮಂಟಪ ಸಾರ್ವಜನಿಕ ಬಳಕೆಗೆ ನೀಡದೆ ಅಲ್ಲಿ ಕರ್ನಾಟಕ ಪಿಪಲ್ಸ್ ಎಜುಕೇಶನ್ ಸೊಸೈಟಿ ಕಚೇರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಪೀಪಿಲ್ಸ್ ಎಜುಕೇಶನ್ ಸೊಸೈಟಿಯ ಸ್ಥಾಪಕ ಅಧ್ಯಕ್ಷರಾಗಿದ್ದರು. ಸದ್ಯ ಅವರು ಸೊಸೈಟಿಯಲ್ಲಿ ಯಾವುದೇ ಹುದ್ದೆ ಹೊಂದಿಲ್ಲ. ಆದರೆ ಪ್ರಿಯಾಂಕ್ ಖರ್ಗೆ ಅದರ ಸದಸ್ಯರಾಗಿದ್ದು, ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಮಣಿಕಂಠ ರಾಠೋಡ್ ಅವರು ಆರೋಪಿಸಿದ್ದಾರೆ. : –- - –- – .