ಅಮೇಠಿ ಸೋಲು ಹಿನ್ನೆಲೆ ದೆಹಲಿ ಬಂಗಲೆ ತೊರೆದ ಸ್ಮೃತಿ ಇರಾನಿ, ಆಕೆಯ ಬಗ್ಗೆ ಕೀಳು ಮಾತು ಬೇಡ ಎಂದ ರಾಹುಲ್ ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯೂಟೆನ್ಸ್‌ 28 ತುಘಲಕ್ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ. ನವದೆಹಲಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯೂಟೆನ್ಸ್‌ 28 ತುಘಲಕ್ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ. ನಿಯಮಗಳ ಪ್ರಕಾರ ಹೊಸ ಸರ್ಕಾರ ರಚನೆಯಾದ ತಿಂಗಳಲ್ಲಿ ಮಾಜಿ ಸಚಿವರು, ಮಾಜಿ ಸಂಸದರು ತಮಗೆ ನೀಡಿದ್ದ ಸರ್ಕಾರಿ ಬಂಗಲೆ ತೊರೆಯಬೇಕು. ಅದರಂತೆ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ 1.5 ಲಕ್ಷ ಮತಗಳ ಅಂತರದಿಂದ ಸೋತಿದ್ದ ಸ್ಮೃತಿ ,ಬಂಗಲೆ ತೊರೆದಿದ್ದಾರೆ. 2019ರಲ್ಲಿ ರಾಹುಲ್‌ ಗಾಂಧಿಯನ್ನು ಸೋಲಿಸಿ ಅಮೇಠಿ ಕ್ಷೇತ್ರದಲ್ಲಿ ಗೆಲುವು ಕಂಡಿದ್ದ ಸ್ಮೃತಿ ಇರಾನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿದ್ದರು. ಸ್ಮೃತಿ ಇರಾನಿ ಬಗ್ಗೆ ಕೀಳು ಮಾತು ಬೇಡ: ರಾಹುಲ್‌ ಗಾಂಧಿನವದೆಹಲಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅಥವಾ ಇತರೆ ಯಾವುದೇ ನಾಯಕರ ಬಗ್ಗೆ ಕೀಳಾಗಿ ಮಾತನಾಡುವುದು ಹಾಗೂ ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಾರ್ವಜನಿಕರನ್ನು ಕೋರಿದ್ದಾರೆ. ಅಮೇಠಿಯಲ್ಲಿ ಸೋತ ಹಿನ್ನೆಲೆಯಲ್ಲಿ ಇರಾನಿ ಅವರು ಗುರುವಾರ ದೆಹಲಿಯಲ್ಲಿರುವ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದರರು. ಬಳಿಕ ಲವರು ಇರಾನಿ ಅವರ ಬಗ್ಗೆ ಕೀಳಾಗಿ ಸೋಷಿಯಲ್‌ ಮೀಡಿಯಾದಲ್ಲಿ ಟೀಕೆ ಮಾಡಿದ್ದರು. ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ರಾಹುಲ್‌, ‘ಸೋಲು-ಗೆಲುವು ಜೀವನದ ಅವಿಭಾಜ್ಯ ಅಂಗಗಳು. ಸ್ಮೃತಿ ಇರಾನಿ ಅಥವಾ ಯಾವುದೇ ನಾಯಕರ ಬಗ್ಗೆ ಕೀಳಾಗಿ ಮಾತನಾಡುವುದು ಹಾಗೂ ಅವರೊಂದಿಗೆ ಅಸಹ್ಯವಾಗಿ ವರ್ತಿಸುವುದು ತಪ್ಪು. ಆದ್ದರಿಂದ ಈ ವರ್ತನೆಯನ್ನು ಇಲ್ಲಿಗೆ ನಿಲ್ಲಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.