2 ದಿನ ರಾಜ್ಯದ 6 ಜಿಲ್ಲೆಯಲ್ಲಿ 20 ಸೆಂ.ಮೀ.ವರೆಗೂ ಭಾರಿ ಮಳೆ: ರೆಡ್‌ ಅಲರ್ಟ್ 20 ಸೆಂ.ಮೀ.ವರೆಗೂ ಮಳೆಯಾಗುವ ಮುನ್ಸೂಚನೆ ಮುಂದಿನ 48 ಗಂಟೆಯಲ್ಲಿ ಕರಾವಳಿಯ 2 ಜಿಲ್ಲೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಬೆಂಗಳೂರು (ಜೂ.10):ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಮರ ಬಿದ್ದು ಬೆಳಗಾವಿಯಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಮೂವರು ಮಳೆ ಸಂಬಂಧಿ ಅನಾಹುತಕ್ಕೆ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ವಿಜಯಪುರ, ಬಾಗಲಕೋಟೆ, ಬೆಂಗಳೂರು ಮತ್ತಿತರ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ. ಬೆಳಗಾವಿಯ ಮೂಡಲಗಿ ತಾಲೂಕಿನ ಅವರಾದಿಯಲ್ಲಿ ಟ್ರ್ಯಾಕ್ಟರ್‌ವೊಂದು ಈ ನದಿಗೆ ಮಗುಚಿ ಬಿದ್ದು ಒಬ್ಬನಾಪತ್ತೆಯಾಗಿದ್ದಾನೆ. ಟ್ರ್ಯಾಕ್ಟರ್‌ನಲ್ಲಿ10 ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಒಂಬತ್ತು ಮಂದಿ ಈಜಿ ದಡ ಸೇರಿದ್ದಾರೆ. ಇನ್ನು ಬೆಳಗುಂದಿ, ಕರ್ಲೆ ಗ್ರಾಮ ಸಂಪರ್ಕಿಸುವ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರಬಿದ್ದು ಸೋಮನಾಥ ಮುಚ್ಚಂಡಿಕರ (21) ಹಾಗೂ ವಿಠಲ ತಳವಾರ(20) ಎಂಬ ಯುವಕರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ವರಂಗದಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಂಕರ್ (65) ಎಂಬವರ ಮೇಲೆ ಅಡಕೆ ಮರ ಬಿದ್ದು ಮೃತಪಟ್ಟಿದ್ದಾರೆ. 2 ದಿನ ರಾಜ್ಯದ 6 ಜಿಲ್ಲೆಯಲ್ಲಿ ಭಾರಿ ಮಳೆ, ರೆಡ್‌ ಅಲರ್ಟ್:ಮುಂದಿನ 48 ಗಂಟೆಯಲ್ಲಿ ಕರಾವಳಿಯ 2 ಜಿಲ್ಲೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳದಲ್ಲಿ ಮುಂದಿನ 2 ದಿನ 20 ಸೆಂ.ಮೀ. ಗೂ ಅಧಿಕ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. : ಸಚಿವರ ಕ್ಷೇತ್ರಗಳ ಹಿನ್ನಡೆ ಬಗ್ಗೆ ಆತ್ಮಾವಲೋಕನ ಅಗತ್ಯ: ಸಚಿವ ಪರಮೇಶ್ವರ್‌ ಉಳಿದಂತೆ ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಾವಣಗೆರೆ, ಚಿಕ್ಕಮಗ ಳೂರು, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಜೂ.14ರ ವರೆಗೆ ವಿವಿಧ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದ್ದು, ಜೂನ್ 18ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.