ವಾರದೊಳಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ ಅಶ್ವತ್ಥನಾರಾಯಣ * ವಿವಿ ಕುಲಪತಿಗಳಿಗೆ ಡಿಸಿಎಂ ಅಶ್ವತ್ಥನಾರಾಯಣ ಸೂಚನೆ* ಲಸಿಕೆ ನೀಡಿದ ನಂತರ ಕಾಲೇಜು ಆರಂಭಕ್ಕೆ ನಿರ್ಧಾರ* ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆ ನಿಲ್ಲಬಾರದು ಬೆಂಗಳೂರು(ಜು.02):ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಜುಲೈ 7ರೊಳಗೆ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೆಲಸಿಕಾಕರಣ ಕುರಿತು ಶುಕ್ರವಾರ ವಿಧಾನಸೌಧದಿಂದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆಲಸಿಕೆನೀಡಬೇಕು ಹಾಗೂ ನಿತ್ಯವೂ ಪೂರೈಕೆಯಾಗುವ ಲಸಿಕೆಯನ್ನು ಸಂಬಂ​ಧಿಸಿದ ಅಧಿ​ಕಾರಿಗಳ ಜತೆ ಸಮನ್ವಯ ಸಾ​ಧಿಸಿಕೊಂಡು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆ ನಿಲ್ಲಬಾರದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಬಾರದು. ಎಲ್ಲ ಕುಲಪತಿಗಳು ಲಸಿಕಾಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಲಸಿಕಾಕರಣ ಮುಗಿದ ನಂತರ ಭೌತಿಕ ತರಗತಿ ಆರಂಭಿಸುವ ಕುರಿತು ನಿರ್ಧರಿಸಲಾಗುವುದು. ಅಲ್ಲಿಯವರೆಗೆ ಆನ್‌ಲೈನ್‌ ತರಗತಿಗಳು ಮುಂದುವರೆಯಲಿವೆ ಎಂದರು. 31 ಲಕ್ಷ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್‌ಫೋನೇ ಇಲ್ಲ..! ವಿದ್ಯಾರ್ಥಿಗಳಿಗೆ ಈಗಾಗಲೇ ಡಿಜಿಟಲ್‌ ವೇದಿಕೆಗಳ ಮೂಲಕ ಎಲ್ಲ ಮಾಹಿತಿ ಒದಗಿಸಲಾಗುತ್ತಿದ್ದರೂ ಮತ್ತಷ್ಟು ಅನುಕೂಲಕ್ಕಾಗಿ ಹೆಲ್ಪ್‌ಲೈನ್‌ ವ್ಯವಸ್ಥೆ ರೂಪಿಸಲಾಗುವುದು. ಹೆಲ್ಪ್‌ಲೈನ್‌ಅನ್ನು ಆಯಾ ವಿವಿ ವ್ಯಾಪ್ತಿಯಲ್ಲಿ ಮಾಡಿಕೊಳ್ಳಬೇಕು. ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ಸರ್ಕಾರ ನೀಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದೊಂದು ಅತ್ಯುತ್ತಮ ಉಪಕ್ರಮ ಆಗಲಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು. ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಮೈಸೂರು, ಮಂಗಳೂರು, ಬೆಳಗಾವಿ, ಶಿವಮೊಗ್ಗ ಮುಂತಾದ ವಿವಿಗಳ ಕುಲಪತಿಗಳು ಸಭೆಯಲ್ಲಿ ಭಾಗಿಯಾಗಿದ್ದರು.