ಸಿಎಂ ವಿರುದ್ಧ ತನಿಖೆಗೆ ಆದೇಶ
ಬೆಂಗಳೂರು,ಸೆ.೨೫:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದಂತಾಗಿದೆ.
ಈ ಪ್ರಕರಣದ ಬಗ್ಗೆ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆಯೂ ಜನಪ್ರತಿನಿಧಿ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ಆದೇಶಿಸಬೇಕು ಎಂಬ ದೂರಿನ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಂತೋಷ್‌ಗಜಾನನ ಭಟ್ ಅವರು ಸಿಆರ್‌ಪಿಸಿ ಸೆಕ್ಷನ್-೧೫೬(೩) ಅಡಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಈ ತನಿಖೆಯನ್ನು ಮೂರು ತಿಂಗಳಲ್ಲಿ ಅಂದರೆ ೨೪.೧೨.೨೦೨೪ರ ಒಳಗೆ ಪೂರ್ಣಗೊಳಿಸಿ ತನಿಖಾ ವರದಿಯನ್ನು ಸಲ್ಲಿಸುವಂತೆಯೂ ನ್ಯಾಯಾಲಯ ಆದೇಶದಲ್ಲಿ ಹೇಳಿದ್ದು, ನ್ಯಾಯಾಲಯದ ಈ ಆದೇಶ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಸಂಕಷ್ಟವನ್ನು ಮತ್ತಷ್ಟು ಹೆಚ್ಚು ಮಾಡಿದೆ. ನಿನ್ನೆಯಷ್ಟೇ ರಾಜ್ಯ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ನ್ಯಾಯಾಲಯ ತನಿಖೆಗೆ ಅಸ್ತು ಎಂದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮೇಲಿಂದ ಮೇಲೆ ಸಂಕಷ್ಟ ಶುರುವಾದಂತಾಗಿದೆ.
ರಾಜ್ಯ ಹೈಕೋರ್ಟ್ ಸಹ ನಿನ್ನೆ ಈ ಪ್ರಕರಣದ ಬಗ್ಗೆ ಮೇಲ್ನೋಟಕ್ಕೆ ತನಿಖೆ ಅವಶ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅಂಶವನ್ನೂ ಉಲ್ಲೇಖಿಸಿರುವ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಜರಿಯಬಾರದು ಎಂದು ಹೇಳಿ ಲೋಕಾಯುಕ್ತ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಭಾರತ ನ್ಯಾಯಸಂಹಿತೆ ಜಾರಿಯಲ್ಲಿದ್ದರೂ ಈ ಕೃತ್ಯಗಳು ನಡೆದಾಗ ಸಿಆರ್‌ಪಿಸಿ ಕಾಯ್ದೆ ಜಾರಿಯಲ್ಲಿದ್ದುದ್ದರಿಂದ ಸಿಆರ್‌ಪಿಸಿ ಅಡಿಯಲ್ಲೇ ತನಿಖೆ ನಡೆಸುವಂತೆಯೂ ನ್ಯಾಯಮೂರ್ತಿಗಳು ಆದೇಶಿಸುವ ಮೂಲಕ ಬಿಎನ್‌ಎಸ್ ಅಡಿಯಲ್ಲಿ ತನಿಖೆ ನಡೆಸಬೇಕೇ ಇಲ್ಲವೇ ಸಿಆರ್‌ಪಿಸಿ ಅಡಿ ನಡೆಸಬೇಕೇ ಎಂಬ ಜಿಜ್ಞಾಸೆಗೂ ಕೊನೆ ಹಾಡಿ ಸಿಆರ್‌ಪಿಸಿ ಅಡಿಯಲ್ಲೇ ತನಿಖೆ ನಡೆಸುವಂತೆ ಸೂಚಿಸಿದೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ೧೪ ನಿವೇಶನ ನೀಡುವುದು ಕಾನೂನು ಬಾಹಿರ ಎಂಬ ದೂರುದಾರರ ಪರ ವಕೀಲರ ವಾದವನ್ನು ಆಲಿಸಿರುವ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ್ದಾರೆ.