ಯುವಕನ ಶವ ಪತ್ತೆ ಇಬ್ಬರ ಸೆರೆ
ಬೆಂಗಳೂರು,ಮೇ.೧೭-ಸಂಪಂಗಿರಾಮನಗರದ ಕಟ್ಟಡವೊಂದರ ಬಳಿ ಕಳೆದ ಮೇ ೯ರಂದು ಅನುಮಾನಸ್ಪಾದವಾಗಿ ಯುವಕನ ಶವ ಪತ್ತೆಯಾದ ಪ್ರಕರಣವನ್ನು ಬೇಧಿಸಿರುವ ಕೇಂದ್ರ ವಿಭಾಗದ ಪೊಲೀಸರು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ರಂಜಿತ್ ಪ್ರಧಾನ್ ಹಾಗೂ ರಮೇಶ್ ಬಂಧಿತ ಆರೋಪಿಗಳಾಗಿದ್ದಾರೆ, ಒಡಿಶಾ ಮೂಲದ ಈ ಇಬ್ಬರು ಕಳೆದ ಒಂದು ವರ್ಷದಿಂದ ಗಾರೆ ಕೆಲಸ ಮಾಡುತ್ತಿದ್ದರು. ಮಿಷನ್ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕೆಲಸ ಮಾಡಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ಮೇ ೯ರಂದು ಸತ್ಯ ಅಲ್ಲಿಗೆ ಬಂದಿದ್ದಾನೆ. ಅಪರಿಚಿತ ವ್ಯಕ್ತಿ ಬಂದಿರುವುದನ್ನು ನೋಡಿ ಆರೋಪಿಗಳು ಪ್ರಶ್ನಿಸಿದ್ದರು. ಈ ನಡುವೆ ಮಾತಿನ ಚಕಮಕಿ, ತಳ್ಳಾಟವಾಗಿ ಸತ್ಯನನ್ನು ನೂಕಿದ್ದಾರೆ. ಆಗ ತುಂಡಾಗಿ ಬಿದ್ದಿದ್ದ ವೈರ್ ತಾಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇದರಿಂದ ಆತಂಕಗೊಂಡ ಆರೋಪಿಗಳು ಶವವನ್ನು ಪಕ್ಕದ ಕಟ್ಟಡಕ್ಕೆ ಶಿಫ್ಟ್ ಮಾಡಿ ಸುಮ್ಮನಾಗಿದ್ದರು. ಮೇ ೧೦ರಂದು ಶವ ಪತ್ತೆಯಾಗಿರುವುದು ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಮೃತನ ಕುಟುಂಬಸ್ಥರು ಸತ್ಯ ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಕುಟುಂಬಸ್ಥರ ವಿರುದ್ಧ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಶವ ಪತ್ತೆಯಾಗಿದ್ದ ಕಾಂಪ್ಲೆಕ್ಸ್ ಪಕ್ಕದ ನಿರ್ಮಾಣ ಹಂತದ ಕಟ್ಟಡದಲ್ಲಿರುವ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಸತ್ಯ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿ ಕೆಲದಿನಗಳ ಹಿಂದೆ ಜಾಮೀನು ಪಡೆದು ಹೊರಬಂದು ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದ. ಸಂಪಂಗಿರಾಮನಗರದ ವಾಸವಾಗಿದ್ದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಹುಡುಗಿ ಕುಟುಂಬಸ್ಥರು ಸತ್ಯ ವಿರುದ್ಧ ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸತ್ಯನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.