ಮಹಿಳೆ ಅಪಹರಣ ಶಾಸಕ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಎಸ್ ಐಟಿ ವಶಕ್ಕೆ
ಬೆಂಗಳೂರು,ಮೇ.4- ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಶಾಸಕ ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಹೆಚ್.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದಿದ್ದು ಬಳಿಕ ಅವರನ್ನು ಬಂಧಿಸಲಿದ್ದಾರೆ‌.
ನಿರಾಕರಣೆಯಾಗುತ್ತಿದ್ದಂತೆ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ
ಎಸ್ ಐಟಿಯ ಐದಾರು ಮಂದಿ ಅಧಿಕಾರಿಗಳ ತಂಡ ರೇವಣ್ಣ ಅವರನ್ನು ವಶಕ್ಕೆ ಪಡೆದಿದೆ. ವಶಪಡಿಸಿಕೊಂಡ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಯತ್ತ ಅವರನ್ನು ಕರೆದುಕೊಂಡು ಹೋಗಿದ್ದಾರೆ.ಅಲ್ಲಿ ವಿಚಾರಣೆ ನಡೆಸಿದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮೇ 4ರ ಸಂಜೆ 5.30ರೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ವಿಚಾರಣೆಗೆ ಹಾಜರಾಗದ ರೇವಣ್ಣ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದರು. ಇನ್ನು, ನಿರೀಕ್ಷಣಾ ಜಾಮೀನಿಗೂ ಅವರು ಅರ್ಜಿ ಸಲ್ಲಿಸಿದ್ದರು.
ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.
ನಿವಾಸಗಳಲ್ಲಿ ಎಸ್‌ಐಟಿ ಮಹಜರು:
ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಐವರ ತಂಡದಿಂದ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿತ್ತು. ಬೆಳಗ್ಗೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗುತ್ತಲೇ ಹಾಸನಕ್ಕೆ ಬಂದಿರುವ ಪೊಲೀಸರ ಎರಡು ತಂಡ, ಪಡುವಲಹಿಪ್ಪೆ ಸೇರಿ ಎರಡು ಕಡೆ ಸ್ಥಳ ಪರಿಶೀಲನೆ ನಡೆಸಿದೆ.
ಮೇ 2ರಂದು ತಡರಾತ್ರಿ, ಬಸವನಗುಡಿಯ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದರು. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು.