ಸಿಸಿ ಟಿವಿ ಫುಟೇಜ್‌ಗಳ ಆಧಾರದಲ್ಲಿ ಉಳಿದ ಆರೋಪಿಗಳ ಪತ್ತೆ :ಎಡಿಜಿಪಿ‌ ಮಾಹಿತಿ
ದಾವಣಗೆರೆ, ಸೆ.20; ಶ್ರೀ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇದುವರೆಗೆ 30 ಜನರನ್ನು ಬಂಧಿಸಿದ್ದು, ಸಿಸಿ ಟಿವಿ ಫುಟೇಜ್‌ಗಳ ಆಧಾರದಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ತಿಳಿಸಿದರು.
ನಗರಕ್ಕೆ ಶುಕ್ರವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಅರಳೀ ಮರ ವೃತ್ತದ ಬಳಿ ಗುರುವಾರ ಸಂಜೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ ಎಂದರು.
ಒಟ್ಟು ನಾಲ್ಕು ಪ್ರಕರಣ ದಾಖಲಾಗಿದೆ. ಈ ಪೈಕಿ 2 ಪ್ರಕರಣಗಳು ಪೊಲೀಸ್ ಇಲಾಖೆಯಿಂದ ದಾಖಲಾದ ಸ್ವಯಂ ಪ್ರೇರಿತ ದೂರುಗಳಾಗಿವೆ. ನಾಲ್ಕೂ ಪ್ರಕರಣಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳನ್ನೂ ಒಳಗೊಂಡಂತೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.
ಘಟನೆಯಲ್ಲಿ ಓರ್ವ ಮೌಲ್ವಿಗೆ ಗಾಯವಾಗಿದೆಯೆಂಬುದಾಗಿ ದೂರು ನೀಡಿದ್ದಾರೆ. ಬಿಯರ್ ಬಾಟಲುಗಳ ಸಂಗ್ರಹ ಸೇರಿದಂತೆ ಸಿಸಿ ಟಿವಿ ಫುಟೇಜ್‌ಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ. ಸದ್ಯಕ್ಕೆ ದಾವಣಗೆರೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಶಾಂತಿ ನೆಲೆಸಿದೆ ಎಂದು ಅವರು ತಿಳಿಸಿದರು. ಇನ್ನೂ ಸ್ವಲ್ಪ ದಿನಗಳ ಕಾಲ ಇಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮುಂದುವರಿಯಲಿದೆ. ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮುಖಂಡರೊಬ್ಬರ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಬಗ್ಗೆಯೂ ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮೆರವಣಿಗೆ ವೇಳೆ ದಾವಣಗೆರೆಯಲ್ಲಿ ಗುರುವಾರ ಆದ ಗಲಾಟೆಯಲ್ಲಿ ಹೊರಗಿನಿಂದ ಬಂದವರ ಬಗ್ಗೆ ಮಾಹಿತಿ ಇಲ್ಲ. ಇದೊಂದು ಪೂರ್ವ ನಿಯೋಜಿತ ಘಟನೆ ಅಲ್ಲ. ತತ್‌ಕ್ಷಣಕ್ಕೆ ಪ್ರಚೋದನೆಯಿಂದ ಆಗಿರಬಹುದಾದ ಘಟನೆ ಎಂದು ಎಡಿಜಿಪಿ ಆರ್.ಹಿತೇಂದ್ರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ರಮೇಶ ಬಾನೋಟ್‌, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಇತರರು ಇದ್ದರು.
ದಾವಣಗೆರೆಯಲ್ಲಿ ಅ.5ರಂದು ನಡೆಯುವ ಗಣೇಶ ವಿಸರ್ಜನೆಗೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಶಾಂತಿ ಸಮಿತಿ ಸಭೆ ನಡೆಸಲಾಗುವುದು.
ಆರ್.ಹಿತೇಂದ್ರ,
ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ)