ದೇಶದ ಜನರು ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ: ಕೇಂದ್ರದ ವಿರುದ್ಧ ರಾಹುಲ್ ಗುಡುಗು
ನವದೆಹಲಿ, ಜು. 29-ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ ಹೇಳಿದರು.
ಲೋಕಸಭೆಯಲ್ಲಿಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಹಿಂದೆ, ಹರಿಯಾಣದಲ್ಲಿ ಕುರುಕ್ಷೇತ್ರ ನಡೆಯುವ ಸಮಯದಲ್ಲಿ 6 ಜನ ಸೇರಿ ಚಕ್ರವ್ಯೂಹವನ್ನು ರಚಿಸಿದ್ದರು. ಆರು ಜನ ಸೇರಿ ಆ ಚಕ್ರವ್ಯೂಹದಲ್ಲಿ ಅಭಿಮನ್ಯುನನ್ನು ಸಿಕ್ಕಿಸಿ ಕೊಲೆ ಮಾಡಿದರು ಎಂದು ತಿಳಿಸಿದರು.
ನಾನು ಚಕ್ರವ್ಯೂಹದ ಕುರಿತು ಸಣ್ಣದೊಂದು ಸಂಶೋಧನೆ ಮಾಡಿದ್ದೇನೆ. ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದೂ ಕರೆಯಲಾಗುತ್ತದೆ. ಪದ್ಮವ್ಯೂಹ ಎಂದರೆ ಕಮಲದ ರಚನೆಯಾಗಿದೆ. ಚಕ್ರವ್ಯೂಹ ಕೂಡ ಕಮಲದ ಆಕಾರದಲ್ಲಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದರು.
21ನೇ ಶತಮಾನದಲ್ಲೂ ಚಕ್ರವ್ಯೂಹವನ್ನು ರಚಿಸಲಾಗಿದೆ ಹಾಗೂ ಅದು ಕಮಲದ ಆಕಾರದಲ್ಲಿದೆ. ಆ ಚಕ್ರವ್ಯೂಹದ ಚಿಹ್ನೆಯನ್ನು ನರೇಂದ್ರ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡು ತಿರುಗಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಭಿಮನ್ಯುವಿಗೆ ಏನಾಯಿತೋ, ಅದರಂತೆ ಭಾರತದ ಜನರನ್ನು ಆ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಿಗಳು ಈಗ ಆ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ ಎಂದು ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡರು.
ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸಿದಂತೆ ಆಧುನಿಕ ಕಾಲದ ಚಕ್ರವ್ಯೂಹವನ್ನು ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.
ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ ಎಂದು ತಿರುಗೇಟು ನೀಡಿದರು.
ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.