ಕಾಲಮಿತಿ ಇಳಿಕೆ
ಧಾರವಾಡ,ಜೂ28: ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸೌಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಹೆಬ್ಬಳ್ಳಿ ಗ್ರಾಮದಲ್ಲಿ ವಿವಿಧ ಕೃಷಿ ಪ್ರಾತ್ಯಕ್ಷಿಕೆ ಉದ್ಘಾಟಿಸಿ, ಫಲಾನುಭವಿಗಳಿಗೆ ಸೌಲತ್ತು ವಿತರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಹಿಂದೆಂದಿಗಿಂತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ.
ಮುಂಗಾರು ಹಂಗಾಮಿಗೆ 1700 ಕೋಟಿ ರೂ ಬೆಳೆ ವಿಮೆ ಪಾವತಿಸಲಾಗಿದೆ. ಕಳೆದ ಸಾಲಿನಲ್ಲಿ ಸುಮಾರು 1000 ಕೋಟಿ ರೂ ವೆಚ್ಚದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ವಿಶ್ವ ವಿದ್ಯಾನಿಲಯ ಗಳ ಮೂಲಕ ರೈತರಿಗೆ ಸಂಶೋದನೆ, ಮಾರ್ಗದರ್ಶನಗಳ ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು. ವಿನಯ್ ಕುಲಕರ್ಣಿ ಕೇತ್ರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಚಿವರ ಸಂಪರ್ಕಹೊಂದಿದ್ದಾರೆ ಎಂದರು.
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೆಬ್ಬಳ್ಳಿ ಗ್ರಾಮದಲ್ಲಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಂಡ ರೈತ ಯಲ್ಲಪ್ಪ ಈಶ್ವರಪ್ಫ ಸಾಲಿ ಅವರ ಕೃಷಿ ತಾಕುಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಕೃಷಿ ಸಚಿವರು ಹೆಬ್ಬಳಿ ಗ್ರಾಮದಲ್ಲಿ ಸಿದ್ದಪ್ಪ ಬಸಪ್ಪ ಬಿಕ್ಕೋಜಿ ಅವರ ಜಮೀನಿನಲ್ಲಿ ದ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದರು. ಇದೇ ಗ್ರಾಮದಲ್ಲಿ ಸಚಿವರು ಆಹಾರ ಮತ್ತು ಪೌಷ್ಠಿಕ ಭದ್ರತಾ ಯಾಜನೆಯಡಿ ರೈತರಿಗೆ ರಾಸಾಯನಿಕ, ರಸ ಗೊಬ್ಬರ ಕೀಟ ನಾಶಕ ವಿತರಣೆ ಮಾಡಿದರು.
ಕೃಷಿ ಸಚಿವರು ಹೆಬ್ಬಳ್ಳಿ ಗ್ರಾಮದಲ್ಲಿ ಹೈಟೆಕ್ ಹಾರ್ವೆಸ್ಟ್ ಹಬ್ ಯೋಜನೆಯಡಿ ಸಂಗಪ್ಪ ಕಲ್ಲಪ್ಪ ಹಳಿಯಾಳ ಅವರಿಗೆ ಬಹುಬೆಳೆ ಹೈಟೆಕ್ ಕಟಾವು ಯಂತ್ರವನ್ನು ವಿತರಿಸಿದರು.