ಜೂ.30ರಂದು ಶಿಕ್ಷಕರ ಅರ್ಹತಾ ಪರೀಕ್ಷೆ : ವ್ಯವಸ್ಥಿತ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.27 :ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ.30 ರಂದು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಟ್ಟುನಿಟ್ಟಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಒಟ್ಟು 43 ಕೇಂದ್ರಗಳಲ್ಲಿ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 11,787 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಬೆಳಿಗ್ಗೆ 9-30ಕ್ಕೆ ಮೊದಲನೆ ಅವಧಿಯ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳು 9ಗಂಟೆಗೆ ಬಂದು ವರದಿ ಮಾಡಿಕೊಳ್ಳಬೇಕು ಎರಡನೇ ಅವಧಿಯ ಪರೀಕ್ಷ್ಷೆ ಮಧ್ಯಾಹ್ನ 2ಗಂಟೆಗೆ ಆರಂಭವಾಗಲಿದ್ದು, 1-30ಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪರೀಕ್ಷೆಯ ಎಲ್ಲ ಕೊಠಡಿಗಳಿಗೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸುವುದು, ಪರೀಕ್ಷಾ ದಿನದಂದು ಪ್ರತಿ ಕೊಠಡಿಗಳಲ್ಲಿ ಛಾಯಾಗ್ರಾಹಕರನ್ನು ನೇಮಿಸಬೇಕು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಖ್ಯದ್ವಾರದೊಳಗೆ ಬರುವಾಗ ಮೊಬೈಲ್ ಫೋನ್, ಸ್ಮಾರ್ಟ್‍ಫೋನ್, ಬ್ಯಾಗ್ ಹಾಗೂ ಇತರೇ ವಸ್ತುಗಳನ್ನು ಒಳಗಡೆ ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಅಭ್ಯರ್ಥಿಯು ಒಳಗಡೆ ಹೋದ ನಂತರ ಮತ್ತೊಮ್ಮೆ ಪರೀಕ್ಷಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಹಳ ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ ವಹಿಸಿದಲ್ಲಿ ಕೊಠಡಿಯ ಮೇಲ್ವಿಚಾರಕರನ್ನು ಹೊಣೆÉಗಾರರನ್ನಾಗಿ ಮಾಡಲಾಗುವುದು. ಕರ್ತವ್ಯ ನಿರ್ವಹಿಸುವವರು ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಧರಿಸಿಬೇಕು. ಅವರನ್ನು ಹೊರತು ಪಡಿಸಿ ಯಾವುದೇ ವ್ಯಕ್ತಿಗಳಿಗೆ ಅವಕಾಶ ನೀಡದಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ನಿಯಮಗಳನ್ನು ಪಾಲಿಸಿಕೊಂಡು ಜವಾಬ್ದಾರಿಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಬೇಕು. ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ತಾವೆಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 144 ಕಲಂ ಜಾರಿ ಮಾಡಲಾಗಿದೆ. ಅದರ ಜೊತೆಗೆ ಎಲ್ಲ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸಿಬ್ಬಂದಿ ಅವಶ್ಯವಿದ್ದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಯಾವುದೇ ತೊಂದರೆಗಳಿದ್ದಲ್ಲಿ ತಮ್ಮ್ಮನ್ನು ಸಂಪರ್ಕಿಸುವಂತೆ ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ, ಖಜಾನೆ ಉಪ ನಿರ್ದೇಶಕ ಹನಮಂತ ಕಾಲತಿಪ್ಪಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ಬಿ.ಇ.ಒಗಳು, ಪ್ರಾಚಾರ್ಯರು ಹಾಗೂ ಇತರರು ಉಪಸ್ಥಿತರಿದ್ದರು.