ಅಂತರ್‍ರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಆಚರಣೆ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.27 :ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಅಂತರ್‍ರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ದಿನಾಚರಣೆ ಅಂಗವಾಗಿ ಬುಧವಾರ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಲಿ, ಉಪ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಜಂಟಿಯಾಗಿ ಚಾಲನೆ ನೀಡಿದರು.
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜಾಥಾವು, ನಗರದ ಗಾಂಧಿವೃತ್ತದ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯವರೆಗೆ ಸಾಗಿ, ದಾರಿಯುದ್ದಕೂ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮನೋವೈದ್ಯ ಡಾ.ಮಂಜುನಾಥ ಮಸಳಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಯುವ ಜನಾಂಗದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಯುವ ಜನಾಂಗ ಮಾದಕ ವಸ್ತುಗಳಿಂದ ದೂರವಿರುವಂತೆ ಸಲಹೆ ನೀಡಿದ ಅವರು, ಉಚಿತ ಸಹಾಯವಾಣಿ 14416 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಡಾ.ಸಂಪತ್ ಗುಣಾರಿ, ಡಾ. ಕವಿತಾ ದೊಡಮನಿ, ಡಾ. ಪರಶುರಾಮ ಹಿಟ್ನಳ್ಳಿ, ಜಿ.ಎಂ. ಕೋಲೂರ ಸೇರಿದಂತೆ ಜಿಲ್ಲಾ ಮಾನಸಿಕ ಕಾರ್ಯಕ್ರಮ ಸಿಬ್ಬಂದಿಗಳು, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ, ಸಿಬ್ಬಂದಿಗಳು, ಬಿಎಲ್‍ಡಿಇಎ ಬಿ.ಎಂ. ಪಾಟೀಲ ನರ್ಸಿಂಗ್ ಕಾಲೇಜ್, ತುಳಜಾಭವಾನಿ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.