ಜೂ. 30 ರಂದು ಎರಡು ಅಧಿವೇಶನದಲ್ಲಿ ಟಿಇಟಿ ಪರೀಕ್ಷೆ, ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಸೂಚನೆ
ಸಂಜೆವಾಣಿ ವಾರ್ತೆ
ದಾವಣಗೆರೆ,ಜೂ.೨೬; ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂ. 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು. ಅವರು  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು. ಜೂನ್ 30ರ  ಬೆಳಿಗ್ಗೆ  9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. 144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು. ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.