ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗಬಾರದು,
ಸಂಜೆವಾಣಿ ವಾರ್ತೆ
 ದಾವಣಗೆರೆ ಜೂ.೧೫; ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗಿದ್ದು ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತನಾಡಿದರು. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಸಿಗಬೇಕು, ಇದರಿಂದ ಉತ್ತಮ ಇಳುವರು ಪಡೆಯಲು ಸಾಧ್ಯವಾಗಲಿದೆ. ಪೂರ್ವ ಮುಂಗಾರಿನಲ್ಲಿ ಕಡಿಮೆ ದಿನಗಳಲ್ಲಿ ಬರುವ ತರಕಾರಿ ಬೆಳೆಯಲು ಪ್ರೋತ್ಸಾಹಿಸಿ, ಜೊತೆಗೆ ದ್ವಿದಳ ಧಾನ್ಯ ಬೆಳೆಯಲು ಹೆಚ್ಚಿನ ಒತ್ತನ್ನು ನೀಡಬೇಕೆಂದರು. ಖಾತರಿಯಡಿ ಹೂ, ತರಕಾರಿ ಬೆಳೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದೀರ್ಘಕಾಲೀನ ಹಾಗೂ ವಿಶೇಷವಾದ ಹಣ್ಣು, ತರಕಾರಿಗಳ ಬೆಳೆಗೆ ಒತ್ತುನೀಡಬೇಕೆಂದು ಸೂಚನೆ ನೀಡಿದರು.ಸಾವಯವ ತರಕಾರಿ ಬೆಳೆಗೆ ಪ್ರೋತ್ಸಾಹಿಸಿ; ಜನರು ಆರೋಗ್ಯ ದೃಷ್ಟಿಯಿಂದ ಸಾವಯವ ಕೃಷಿಯಿಂದ ಮಾಡಲಾದ ಹಣ್ಣು, ತರಕಾರಿ, ಸೊಪ್ಪುಗಳನ್ನು ಬಳಸಲು ಇಷ್ಟಡುತ್ತಾರೆ. ಅದಕ್ಕಾಗಿ ಸಾವಯವ ಕೃಷಿಯಿಂದ ಬೆಳೆಯುವ ತೋಟಗಾರಿಕೆ, ಕೃಷಿಗೆ ಒತ್ತು ನೀಡಬೇಕು. ಸಾವಯವ ಮೂಲಕ ಬೆಳೆದ ಹಣ್ಣು, ತರಕಾರಿಗಳಿಗೆ ಗುಣಮಟ್ಟದ ದೃಢೀಕರಣದೊಂದಿಗೆ ಪ್ರಮಾಣಿಕರಿಸಿ ಮಾರುಕಟ್ಟೆ ಕಲ್ಪಿಸಿದಲ್ಲಿ ಇದಕ್ಕೆ ಸಾಕಷ್ಟು ಬೇಡಿಕೆ ಇದೆ. ರೈತರಿಗೆ ಇದರಿಂದ ಹೆಚ್ಚಿನ ಆದಾಯ ಬರುವಂತಾಗುತ್ತದೆ ಎಂದು ತೋಟಗಾರಿಕೆ, ಕೃಷಿ ಅಧಿಕಾರಿಗಳಿಗೆ ತಿಳಿಸಿದರು.ಜಲಾನಯನ ಕಾಮಗಾರಿಗೆ ಒತ್ತು; ಖಾತರಿಯಡಿ ಜಲಸಂರಕ್ಷಣೆಗಾಗಿ ರೈತರ ಹೊಲಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಚೆಕ್ ಡ್ಯಾಂ, ಇಂಗುಗುಂಡಿಗಳನ್ನು ನಿರ್ಮಾಣ ಮಾಡುವ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಬೇಕು. ಮಳೆಗಾಲದಲ್ಲಿ ಹೆಚ್ಚು ನೀರು ನಿಲ್ಲುವಂತೆ, ಇಂಗುವಂತೆ ನೋಡಿಕೊಂಡಲ್ಲಿ ಬೇಸಿಗೆ ಎದುರಿಸಲು ಸಾಧ್ಯವಾಗಲಿದೆ ಎಂದರು.ಈ ವೇಳೆ ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ಅವರು ಜಿಲ್ಲೆಯಲ್ಲಿ ಉಪಚಾರವಾಗದ 60 ಸಾವಿರ ಹೆಕ್ಟೇರ್ ಇದ್ದು ಈಗಾಗಲೇ 1.80 ಲಕ್ಷ ಹೆಕ್ಟೇರ್ ಉಪಚಾರವಾದ ಜಲಾನಯನ ಪ್ರದೇಶ ಜಿಲ್ಲೆಯಲ್ಲಿದೆ. ಖಾತರಿಯಡಿ ಇಂತಹ ಪ್ರದೇಶದಲ್ಲಿ ಈ ವರ್ಷ ಜಲಸಂರಕ್ಷಣಾ ಕಾಮಗಾರಿಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಿದರು.