ತಂಬಾಕು ಉತ್ಪನ್ನ ಮಾರಾಟಗಾರರ ಅಂಗಡಿಗಳಿಗೆ ದಾಳಿ: 11 ಪ್ರಕರಣ ದಾಖಲು

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೧೪; ಚಿತ್ರದುರ್ಗ ನಗರದ ತುರುವನೂರು ರಸ್ತೆ ಹಾಗೂ ಸೇಂಟ್ ಜೋಸೆಫ್ ಶಾಲೆಯ ಸುತ್ತ-ಮುತ್ತ ಪ್ರದೇಶಗಳಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ, ದಾಳಿ ನಡೆಸಿ ದಂಡ ವಿಧಿಸಿದೆ.ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು. ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು.ಸೆಕ್ಷನ್-4 ಅಡಿಯಲ್ಲಿ 02 ಪ್ರಕರಣ ದಾಖಲಿಸಿ ರೂ. 200 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 02 ಪ್ರಕರಣ ದಾಖಲಿಸಿ ರೂ.200 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 07 ಪ್ರಕರಣದ ದಾಖಲಿಸಿ ರೂ. 1200 ದಂಡವನ್ನು ವಸೂಲಿ ಮಾಡಲಾಯಿತು.ತಂಬಾಕು ದಾಳಿಯಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ತಾಲ್ಲೂಕು ಅರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಪೊಲೀಸ್ ಇಲಾಖೆಯ ಶೃಂಗಾರ ಸಾಗರ್, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು