ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಇಲಾಖೆಗಳ ಸಮನ್ವಯ ಅಗತ್ಯ -ಸದಾಶಿವ ಪ್ರಭು ಬಿ
ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ8: ಮಲೇರಿಯಾ, ಡೆಂಗೆ, ಚಿಕೂನ್‍ಗುನ್ಯ, ಮೆದುಳು ಜ್ವರ ಮತ್ತು ಆನೆಕಾಲು ರೋಗ ಸೇರಿದಂತೆ ನಾನಾ ರೋಗಗಳ ತಡೆ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಲು ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯ ಕೆಸ್ವಾನ್ ಹಾಲನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಆರಂಭವಾಗಿದ್ದರಿಂದಾಗಿ ಈಗಾಗಲೇ ಸೊಳ್ಳೆಗಳು ಹೆಚ್ಚಾಗಿ ಮಲೇರಿಯಾ, ಡೆಂಗೆ, ಚಿಕೂನ್‍ಗುನ್ಯ, ಮೆದುಳು ಜ್ವರ ಮತ್ತು ಆನೆಕಾಲು ರೋಗಗಳು ಬಾಧಿಸಲಾರಂಭಿಸುತ್ತವೆ. ಈ ಹಿನ್ನೆಲೆಯಲ್ಲ ಆರೋಗ್ಯ ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ರೂಪಿಸಿ ವಿವಿಧ ಇಲಾಖೆಗಳ ಸಹಕಾರ ಪಡೆದು ಅನುಷ್ಠಾನಗೊಳಿಸಬೇಕು ಎಂದು ಸಲಹೆ ಮಾಡಿದರು.
ವಿಜಯನಗರ ಜಿಲ್ಲೆಯ ನಗರಸಭೆ, ವಿವಿಧ ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಲಾರ್ವ ನಾಶಕಗಳಾದ ಬಿಟಿಐ ಸಿಂಪಡಣೆ, ಟೆಮಿಫಾಸ್ ಸಿಂಪಡಣೆ ಕಾರ್ಯವಾಗಬೇಕು. ಮತ್ತು ಸೊಳ್ಳೆನಾಶಕ ಧೂಮೀಕರಣ ಕ್ರಮಗಳಿಗೆ ಸಂಬಂಧಿಸಿದ ಸರಕು ಸರಂಜಾಮುಗಳ ದಾಸ್ತಾನು ಇಟ್ಟುಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರತಿದಿನ ನಗರಸಭೆ ಪಟ್ಟಣ ಪಂಚಾಯಿತಿಯ ಕಸದ ವಾಹನಗಳ ಮೈಕಿಂಗ್‍ನಲ್ಲಿ ರೋಗವಾಹಕ ಆಶ್ರಿತ ರೋಗಗಳ ಕುರಿತು ಆಡಿಯೋಗಳನ್ನು ಪ್ರಚುರ ಪಡಿಸಬೇಕು ಎಂದು ತಿಳಿಸಿದರು.
ನಗರಸಭಾ ಪ್ರದೇಶಗಳಲ್ಲಿ ಓವರ್ ಹೆಡ್ ಟ್ಯಾಂಕ್ ಮತ್ತು ಸಂಪ್‍ಗಳ ನಿರ್ಮಾಣ ಮತ್ತು ಅವುಗಳಿಗೆ ಸೊಳ್ಳೆ ಸುರಕ್ಷಿತ ನೀರು ಸಂಗ್ರಹಣೆ, ಬಿಸಾಡಿದ, ಅನುಪಯುಕ್ತ ವಸ್ತುಗಳ ವಿಲೇವಾರಿ ಮಾಡಬೇಕು. ಕೈಗಾರಿಕಾ ಪ್ರದೇಶದಲ್ಲಿ ವಾಸಿಸುವ ಕಾರ್ಮಿಕರಿಗೆ ಸೊಳ್ಳೆ ಪರದೆ ಮತ್ತು ಸೊಳ್ಳೆ ಜಾಲರಿಗಳನ್ನು ಬಳಸಲು ಅನುಕೂಲ ಮಾಡಿಕೊಡಬೇಕು ಎಂದು ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಲಾರ್ವಹಾರಿ ಮೀನುಗಳನ್ನು ಉತ್ಪತ್ತಿ ಮಾಡಿ ಸರಬರಾಜು ಮಾಡಲು ಸಂಗ್ರಹಣಾ ತೊಟ್ಟಿಗಳನ್ನು ಜಿಲ್ಲಾ ಮಟ್ಟದಲ್ಲಿ ನಿರ್ವಹಿಸಬೇಕು ಹಾಗೂ ಆರೋಗ್ಯ ಇಲಾಖೆಗೆ ಅವಶ್ಯವಿದ್ದ ಸಂದರ್ಭಗಳಲ್ಲಿ ಲಾರ್ವ ಹಾರಿ ಮೀನುಗಳನ್ನು ಒದಗಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾಥಾ ಕಾರ್ಯಗಳನ್ನು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಗ್ರಾಮಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ಮಾಡಿದರು. ಸೊಳ್ಳೆಗಳ ನಿವಾರಕಗಳಾಗಿ ಬೇವಿನ ಎಣ್ಣೆ ಮತ್ತು ನಿಂಬೆಹುಲ್ಲಿನ ಎಣ್ಣೆ ಬಳಸುವ ಬಗ್ಗೆ ಪ್ರಚಾರ ನಡೆಸಲು ಆಯುಷ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ರೋಗವಾಹಕ ಆಶ್ರಿತ ರೋಗಗಳ ಕುರಿತಾದ ರೋಗ ಲಕ್ಷಣಗಳು, ರೋಗ ಹರಡುವಿಕೆ, ಮುಂಜಾಗ್ರತಾ ಹಾಗೂ ನಿಯಂತ್ರಣಾ ಕ್ರಮಗಳ ಕುರಿತು ಪ್ರಮುಖ ಸಂದೇಶಗಳನ್ನು ದಿನಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಪ್ರಚುರಪಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ ಕೇಂದ್ರಗಳ ಕಿಟಕಿಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು ಹಾಗೂ ಅಂಗನವಾಡಿ ಒಳಗೆ ಮತ್ತು ಸುತ್ತಲು ಸರಿಯಾದ ರೀತಿಯಲ್ಲಿ ಸ್ವಚ್ಚತೆ ಕಾಪಾಡಬೇಕು. ಸೊಳ್ಳೆ ಮುಕ್ತ ಪರಿಸರ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಬಾವಿ ಮತ್ತು ಕೃಷಿ ಹೊಂಡಗಳಲ್ಲಿ ಲಾರ್ವಹಾರಿ ಮೀನುಗಳನ್ನು ಬಿಡುವಂತೆ ಸೂಕ್ತ ಕ್ರಮವಹಿಸಲು ಮತ್ತು ಬೇವು ಮಿಶ್ರಿತ ಜೈವಿಕ ರಸಗೊಬ್ಬರಗಳನ್ನು ಬಳಕೆ ಮಾಡುವುದರಿಂದ ಗದ್ದೆಗಳಲ್ಲಿ ಸೊಳ್ಳೆ ಉತ್ಪತ್ತಿಯನ್ನು ತಡೆಯಲು ರೈತರಲ್ಲಿ ಮನವರಿಕೆ ಮಾಡಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ಕಮಲಮ್ಮ ಅವರು, ಪ್ರಾತ್ಯಕ್ಷಿಕೆಯ ಮೂಲಕ ರೋಗವಾಹಕ ಆಶ್ರಿತ ರೋಗಳ ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು ಮತ್ತು ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಯುವರಾಜ ನಾಯ್ಕ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ.ಷಣ್ಮುಖ ನಾಯ್ಕ ಬಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ವ್ಯವಸ್ಥಾಪಕರಾದ ಹನುಮಂತಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿನಯ್, ಜಿಲ್ಲಾ ಕ್ಷಯರೊಗ ನಿರ್ಮೂಲಣಾಧಿಕಾರಿ ಡಾ.ಜಗದೀಶ್ ಪಾಟ್ನಿ, ಜಿಲ್ಲಾ ಕುಷ್ಠರೋಗ ನಿರ್ಮೂಲಾಣಾಧಿಕಾರಿ  ಡಾ.ರಾಧಿಕಾ, ತಾಲೂಕು ಆರೋಗ್ಯಾಧಿಕಾರಿ ಡಾ.ಭಾಸ್ಕರ್, ಐ.ಎಫ್.ಒ ಮಹಮ್ಮದ್ ತಾಸೀನ್, ಎಸ್.ಎ.ಐ (ಸಿ.ಎಂ.ಸಿ) ಶಶಿಭೂಷಣ ಹಿರೇಮಠ, ಕೆ.ಎಚ್.ಶಿವಕುಮಾರ್, ಜಿ.ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.
One attachment • Scanned by Gmail