ಮುಮ್ಮೆಟ್ಟಿಗುಡ್ಡ ಅಮೋಘಸಿದ್ಧ ದೇವಸ್ಥಾನ ಆವರಣದಲ್ಲಿ ಪರಿಸರ ದಿನಾಚರಣೆ
ವಿಜಯಪುರ, ಜೂ.7: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗ, ರಾಜ್ಯ ಮಾಲಿನ್ಯ ಮಂಡಳಿ ಪ್ರಾದೇಶಿಕ ಕಚೇರಿ ಸಹಯೋಗದಲ್ಲಿ ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡ ಅಮೋಘಸಿದ್ದ ದೇವಸ್ಥಾನದ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಬುಧವಾರ ವಿಶ್ವ ಪರಿಸರ ದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿ ದೇವಸ್ಥಾನದ ಅಧಿಕಾರಿಗಳ ಮಾರ್ಗದರ್ಶನ ಸ್ವಚ್ಚತಾ ಕಾರ್ಯ ಕೈಗೊಂಡರು.
ಪರಿಸರ ಅಧಿಕಾರಿ ಎಂ. ಎ. ಮನಿಯಾರ ಅವರು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ವಹಿಸಬೇಕಾದ ಜವಾಬ್ದಾರಿ ಮತ್ತು ಜನಜಾಗೃತಿ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಪರಿಸರ ಸಂರಕ್ಷಣೆಯ ವಿಷಯದ ಕುರಿತು ವಿದ್ಯಾರ್ಥಿಗಳಿಗಾಗಿ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 20 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ವಿ.ಜಿ. ಸಂಗಮ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ನವೀನ ಎನ್. ದೇಸಾಯಿ, ಸಂಯೋಜಕಿ ಡಾ. ಅನುರಾಧಾ ಟಂಕಸಾಲಿ, ಅಧ್ಯಾಪಕರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.