ಸಿದ್ಧರಾಮಯ್ಯ ರಾಜೀನಾಮೆಗೆ ಶ್ರೀರಾಮ್ ಸೇನೆ ಒತ್ತಾಯ
ಕಲಬುರಗಿ:ಸೆ.24: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಕ್ರಮವನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿದ್ದು ಕೂಡಲೇ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಶ್ರೀರಾಮ್ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಶನ್ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಹಾಗಾಗಿ ಸಿದ್ಧರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಕಾನೂನು ಎದುರಿಸಿ ನಿರಪರಾಧಿಯಾಗಿ ಹೊರಬಂದು ಮತ್ತೆ ಆಡಳಿತ ನಡೆಸಬೇಕು ಎಂದು ಆಗ್ರಹಿಸಿದರು.
ಸಿದ್ಧರಾಮಯ್ಯ ಅವರು 2013ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗಿನಿಂದ ಹಿಡಿದು ಇಲ್ಲಿಯವರೆಗೂ ಹಿಂದೂ ವಿರೋಧಿಯಾಗಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಳ್ಳುವುದಿಲ್ಲ, ದೇವಸ್ಥಾನಕ್ಕೆ ಹೋಗುವುದಿಲ್ಲ. ಕೇಸರಿ ವಿರೋಧಿಯಾಗಿದ್ದಾರೆ. ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ. ಈಗ ಆರೋಪ ಬಂದ ಮೇಲೆ ಮಂಡ್ಯದ ಹತ್ತಿರ ಇರುವ ಹನುಮಾನ್ ಮಂದಿರಕ್ಕೆ ಮಾಡಿದ ಪಾಪ ತೊಳೆದುಕೊಳ್ಳಲು ಹೋದರು. ಹೇಸಿಗೆ ಪಾಪವನ್ನು ಮನದಲ್ಲಿಟ್ಟುಕೊಂಡು ಕಾಶಿಗೆ ಹೋದರೇನು ಫಲ ಎಂಬಂತೆ ದೇವರು ತನಿಖೆ ಎದುರಿಸಲು ಆಜ್ಞೆ ಮಾಡಿದ್ದು, ಕೂಡಲೇ ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಟ್ಟು ಕಾನೂನಿಗೆ ಗೌರವಿಸಬೇಕು ಎಂದು ಅವರು ಒತ್ತಾಯಿಸಿದರು.