ವಿಜಯನಗರ ಜಿಲ್ಲೆ: ಕಲಬುರಗಿ ಪ್ರಾದೇಶಿಕ ಆಯುಕ್ತಕೃಷ್ಣ ಭಾಜಪೇಯಿ: ಪ್ರಗತಿ ಪರಿಶೀಲನೆ
ಸಂಜೆವಾಣಿ ವಾರ್ತೆ
ಹೊಸಪೇಟೆ (ವಿಜಯನಗರ)ಸೆ24: ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
2024ರ ಜುಲೈ ಮಾಹೆಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ಆಯುಕ್ತರು ಪ್ರಗತಿ ಪರಿಶೀಲಿಸಿದರು. ಮಾತನಾಡಿದ ವಿಜಯನಗರ ಜಿಲ್ಲೆಯಲ್ಲಿ ಕಳೆದ ವರ್ಷ ಮತ್ತು ಪ್ರಸ್ತುತ ವರ್ಷದ ಫಲಿತಾಂಶದಲ್ಲಿ ಇಳಿಕೆಯಾಗಿರುವುದನ್ನು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಂಭೀರವಾಗಿ ಪರಿಗಣಿಸಿದೆ.
ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ನಿರ್ಣಯಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಮತ್ತು ಹರಪನಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಫಲಿತಾಂಶ ಸುಧಾರಣೆಯ ಜವಾಬ್ದಾರಿಯನ್ನು ಸರಿಯಾಗಿ ನಿಬಾಯಿಸುವಂತೆ ಸೂಚನೆ ನೀಡಿದರು.
ಮಾರಕವಾದ ಡೆಂಗೆ ಜ್ವರ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗದಂತೆ ಮುಂಜಾಗ್ರತೆ ವಹಿಸಬೇಕು. ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿ ಮನೆಮನೆಗೆ ತೆರಳಿ ನೀರು ಸಂಗ್ರಹವಾಗದಂತೆ, ಟೈರುಗಳಲ್ಲಿ ನೀರು ಸಂಗ್ರಹಣೆಯಾಗದಂತೆ ನೋಡಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ಎರಡು ವಾರಕ್ಕೊಮ್ಮೆ ಸಭೆ ನಡೆಸಿ ಪರಿಶೀಲನೆ ನಡೆಸಬೇಕು ಎಂದು ಆಯುಕ್ತರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕಲುಷಿತ ನೀರು ಕುಡಿದು ಮಧುಗಿರಿಯಲ್ಲಿ ಸಾವಿಗೀಡಾದ ಪ್ರಕರಣ ಎಲ್ಲೂ ಮರುಕಳಿಸಬಾರದು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಕಲುಷಿತ ನೀರು ಕುಡಿದು ಸಾವಿಗೀಡಾಗುವ ಪ್ರಕರಣಗಳು ದಾಖಲಾಗದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ಜಿಲ್ಲಾದ್ಯಂತ ಎಲ್ಲ ಕಡೆಗೆ ಶುಚಿತ್ವದ ಕಡೆಗೆ ಗಮನ ಕೊಡಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ಸೂಚನೆ ನೀಡಿದರು.
ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಮತ್ತು ಹರಪನಹಳ್ಳಿಯ ಸೇರಿದಂತೆ ಎಲ್ಲಾ ತಹಸೀಲ್ದಾರ ಕಚೇರಿಗಳಲ್ಲಿ ಆಯಾ ತಾಲೂಕುಗಳಲ್ಲಿ ಸರ್ಕಾರಿ ಭೂಮಿಯ ವಿವರ, ಅತಿಕ್ರಮಣವಾದ ಕೆರೆ ಮತ್ತು ಭೂಮಿ, ಎಷ್ಟು ವರ್ಷದಿಂದ ಅತೀಕ್ರಮಣವಾಗಿದೆ. ಕೋಡಿಗಳು, ನಾಲಾ, ಹಳ್ಳಗಳು, ನೀರಿನ ಪ್ರಮಾಣ, ಗೋಮಾಳ ಮಾಹಿತಿಯನ್ನು ಕಚೇರಿಗಳಲ್ಲಿ ಪ್ರದರ್ಶಿಸಲು ಎಲ್ಲ ತಹಸೀಲ್ದಾರರು ಕೂಡಲೇ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಮತ್ತು ತಾಲೂಕುಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಿರಿಯ ಅಭಿಯಂತರರು ಜಿಲ್ಲೆಯ ಎಲ್ಲಾ ಕುಡಿಯುವ ನೀರಿನ ಮೂಲಗಳಿಗೆ ನೀರಿನ ಸಂಪರ್ಕ ವ್ಯವಸ್ತೆಗಳಿಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಬೇಕು. ನೀರಿನ ವಿತರಣಾ ಮಾರ್ಗಗಳಲ್ಲಿ ಯಾವುದೇ ರೀತಿಯ ಸೋರಿಕೆ ಮತು ಹಾನಿಗಳು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮವಹಿಸಬೇಕು. ಕುಡಿಯುವ ನೀರಿನ ಪರೀಕ್ಷೆಯನ್ನು ಬೇಗನೆ ಪೂರ್ಣಗೊಳಿಸಬೇಕು ಎಂದು ಆಯುಕ್ತರು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಕೊಲೆಯಾದ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಎಫ್‍ಐಆರ್ ದಾಖಲಾದ ತಕ್ಷಣ ಸರ್ಕಾರಿ ನೌಕರಿಯನ್ನು ನೀಡಬೇಕು ಎನ್ನುವ ನಿಯಮಪಾಲನೆ ಮಾಡುವಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕು. ಜಿಲ್ಲಾಮಟ್ಟದಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ  ಸಭೆಗಳನ್ನು ವರ್ಷದಲ್ಲಿ ಎರಡು ಬಾರಿ ನಡೆಸಬೇಕು. ಜಾತಿ ಸಿಂಧುತ್ವ ಪ್ರಮಾಣ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎನ್ನುವ ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ಜಿಲ್ಲೆಗಳಲ್ಲಿನ ತಾಲೂಕುಮಟ್ಟದಲ್ಲಿ ಒಂದು ಕ್ರೀಡಾಂಗಣವನ್ನು ಮತ್ತು ಎಲ್ಲಾ ಹೋಬಳಿ ಕೇಂದ್ರದಲ್ಲಿ ಆಟದ ಮೈದಾನಗಳ ನಿರ್ಮಾಣ ಮಾಡಲು ಜರೂರು ಕ್ರಮವಹಿಸಬೇಕು ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು.
ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯವು ವೇಗವಾಗಿ ನಡೆಯಬೇಕು. ಕಾಮಗಾರಿಗಳು ಪ್ರಾರಂಭವಾಗದೇ ಇರಲು ಕಾರಣ ಏನು ಎಂಬುದರ ಬಗ್ಗೆ ಪರಿಶೀಲಿಸಬೇಕು. ಸರ್ಕಾರವು ಅನುದಾನ ಬಿಡುಗಡೆ ಮಾಡಿದ ಕೂಡಲೇ ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಬಾಲ ಕಾರ್ಮಿಕರನ್ನು ರಕ್ಷಿಸಲು ಕಾರ್ಮಿಕ ಇಲಾಖೆಯಿಂದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕುರಿಗಾಹಿಗಳು ಬಂದೂಕು ಲೈಸೆನ್ಸ್ ಕೋರಿದರೆ ನಿಯಮಾನುಸಾರ ಪರಿಶೀಲಿಸಿ ಲೈಸೆನ್ಸನ್ನು ಜರೂರಾಗಿ ನೀಡುವ ಬಗ್ಗೆ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಆಯುಕ್ತರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಷಾಹ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲಾನ್, ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ವಿವೇಕಾನಂದ ಪಿ., ಚಿದಾನಂದ ಗುರುಸ್ವಾಮಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.