ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ: ರಾಜ್ಯ ಸರ್ಕಾರದಿಂದ ಆಶಾದಾಯಕ ನಿರ್ಧಾರ: ಮರಿತಿಬ್ಬೇಗೌಡ ವಿಶ್ವಾಸ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ 22- ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿರುವ ಓಪಿಎಸ್ ಮರು ಜಾರಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಜ್ಞರ ಸಮಿತಿ ರಚನೆ ಮಾಡಿದ್ದು, ಅದರ ವರದಿ ಬಳಿಕ ಸಾಧಕ ಬಾಧಕಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳುವವರಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಐದನೇ ಬಾರಿ ಆಯ್ಕೆ ಬಯಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ಕಳೆದ ನಾಲ್ಕು ಅವಧಿಯಿಂದಲು ಶಿಕ್ಷಕರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿಕೊಂಡು ಅವರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಬಂದಿದ್ದೇನೆ. ಅವರ ಧ್ವನಿಯಾಗಿ, ಸಮಸ್ಯೆಗಳ ಕುರಿತು ವಿಧಾನಪರಿಷತ್‍ನಲ್ಲಿ ಗಮನ ಸೆಳೆಯುವ ಜೊತೆಗೆ ಅವುಗಳು ಜಾರಿಯಾಗುವಂತೆ ನೋಡಿಕೊಂಡಿದ್ದೇನೆ. ಹೀಗಾಗಿ ಶಿಕ್ಷಕÀ ಬಂಧುಗಳು ನನ್ನಗೆ ಆರ್ಶಿವಾದ ಮಾಡುತ್ತಾರೆ ಎಂಬ ಅಚಲ ವಿಶ್ವಾಸ ಇದೆ ಎಂದರು.
ಕಳೆದ ವರ್ಷ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ಜನರ ಆಶೋತ್ತರಗಳನ್ನು ಈಡೇಸುವಲ್ಲಿ ಸಫಲವಾಗಿದೆ. ಐದು ಗ್ಯಾರಂಟಿಗಳ ಜೊತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವಮಧು ಬಂಗಾರಪ್ಪ ಅವರು ನೀಡಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಶಿಕ್ಷಕರ ಸಮಸ್ಯೆಗಳ ಕುರಿತು 2 ದಿನಗಳ ಪ್ರತ್ಯೇಕ ವಿಧಾನ ಪರಿಷತ್ ಅಧಿವೇಶನವನ್ನು ವಿಶೇಷವಾಗಿ ನಡೆಸಿ, ಬಹಳಷ್ಟು ಚರ್ಚೆಗಳು ಸದನದಲ್ಲಿ ನಡೆಯುವಂತೆ ನೋಡಿಕೊಂಡಿದ್ದಾರೆ. ನಾನು ನಿಮ್ಮೆಲ್ಲರ ಪ್ರತಿನಿಧಿಯಾಗಿ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದಿದ್ದೇನೆ. ಇದನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಖ್ಯಮಂತ್ರಿಗಳಿಗೆ ಶಿಕ್ಷಕರು ಹಾಗು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರವಾದ ಕಾಳಜಿ ಇದೆ ಎಂದರು.
ಇದರ ಭಾಗವಾಗಿ ಕಳೆದ ಚುನಾವಣೆಯಲ್ಲಿ ಘೋಷಣೆ ಮಾಡಿದ್ದಂತೆ ಈಗ ಜಾರಿಯಲ್ಲಿರುವ ಎಲ್‍ಪಿಎಸ್ ಸ್ಕೀಂ ಅನ್ನು ರದ್ದು ಮಾಡಿ, ಓಪಿಎಸ್ ಮರು ಜಾರಿ ಮಾಡುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಸಮಿತಿ ರಚನೆ ಮಾಡಿದ್ದಾರೆ. ಈ ಬಗ್ಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏನು ಹೇಳಲು ನಾನು ಆಶಕ್ತನಾಗಿದ್ದೇನೆ. ಶಿಕ್ಷಕ ಬಂಧುಗಳಿಗೆ ನಮ್ಮ ಸರ್ಕಾರದಿಂದ ಒಳ್ಳೆಯದಾಗುತ್ತದೆ ಎಂದಷ್ಟೇ ಹೇಳ ಬಲ್ಲೆ ಎಂದರು.
ಪ್ರಥಮವಾಗಿ ಆಡಳಿತ ಪಕ್ಷದ ಅಭ್ಯರ್ಥಿ: ಕಳೆದ ನಾಲ್ಕು ಬಾರಿ ಆಯ್ಕೆಯಾದಾಗಲು ಸಹ ನಾನು ವಿರೋಧ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್‍ಗೆ ಆಯ್ಕೆಯಾಗಿ ಬರುತ್ತಿದ್ದೆ. ಈ ಬಾರಿ ಆಡಳಿತ ಪಕ್ಷದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಮ್ಮ ಮುಂದೆ ಮತಯಾಚನೆ ಮಾಡುತ್ತಿದ್ದೇವೆ. ಇನ್ನು ನಾಲ್ಕು ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲಿದೆ. ಹೀಗಾಗಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವು ಹೊಂದಿರುವ ನನಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಶಿಕ್ಷಕರ ಧ್ವನಿಯಾಗಿ ಸರ್ಕಾರ ಹಾಗೂ ಸದನದಲ್ಲಿ ಕೆಲಸ ಮಾಡುವುದಾಗಿ ಮರಿತಿಬ್ಬೇಗೌಡ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆದ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿಗಳಾದ ಶ್ರೀಕಂಠು, ರುಜೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಎಸ್ಟಿ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಪು. ಶ್ರೀನಿವಾಸನಾಯಕ, ಮಹದೇವಯ್ಯ ಇತರರು ಇದ್ದರು.