ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ: ಪ್ರಾಯೋಗಿಕವಾಗಿ ಪ್ರತ್ಯೇಕ ವಿಭಾಗ ಪ್ರಾರಂಭ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೨೨; ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುವ ಜಿಲ್ಲೆಯ ಕೆಲವು ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪಿಯು ವಿಜ್ಞಾನ ಕನ್ನಡ ಬೋಧನೆಗೆ ಪ್ರತ್ಯೇಕವಾಗಿ ವಿಭಾಗ ಪ್ರಾರಂಭ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಕುರಿತ ಸಭೆ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. 1 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ತಕ್ಷಣ ಇಂಗ್ಲಿಷ್ ಮಾಧ್ಯಮ ಅಳವಡಿಸಿಕೊಳ್ಳುವುದು ಕಷ್ಟಸಾಧ್ಯವಾಗಲಿದೆ. ಹಾಗಾಗಿ ಜಿಲ್ಲೆಯ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪಿಯು ವಿಜ್ಞಾನ ಕನ್ನಡ ಬೋಧನೆಗೆ ಪ್ರತ್ಯೇಕವಾಗಿ ವಿಭಾಗ ಪ್ರಾರಂಭ ಮಾಡಿದರೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.ಪಿಯು ವಿಜ್ಞಾನ ಸಿಇಟಿ, ನೀಟ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವೇ ಪಿಯು ವಿಜ್ಞಾನ ಪಠ್ಯಪುಸ್ತಕಗಳನ್ನು ಕನ್ನಡದಲ್ಲಿ ಮುದ್ರಿಸಿ ಎಲ್ಲಾ ಪಿಯು ಕಾಲೇಜುಗಳಿಗೆ ಪೂರೈಕೆ ಮಾಡಲಾಗಿದೆ. ಪಿಯು ವಿಜ್ಞಾನ ಕನ್ನಡ ಮಾಧ್ಯಮಕ್ಕೆ ಪ್ರವೇಶಾತಿ, ಪೋಷಕರ ಪ್ರತಿಕ್ರಿಯೆ, ಉಪನ್ಯಾಸಕರ ಅಭಿಪ್ರಾಯ ಆಧಾರದ ಮೇಲೆ ಮುಂದಿನ ತೀರ್ಮಾನಕೈಗೊಳ್ಳಲಾಗುವುದು ಎಂದು ತಿಳಿಸಿದರು.