ಕೇರಳದಲ್ಲಿ ವೆಸ್ಟ್ ನೈಲ್ ವೈರಸ್‍ಪ್ರಕರಣಗಳು ಹೆಚ್ಚಳ: ಕರ್ನಾಟಕದ ಗಡಿಯಲ್ಲಿ ಅಲರ್ಟ್
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.20- ನೆರೆಯರಾಜ್ಯ ಕೇರಳದಲ್ಲಿ ವೆಸ್ಟ್ ನೈಲ್ ವೈರಸ್‍ನ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಕರ್ನಾಟಕ ಗಡಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಕಾಡಂಚಿನ ಗ್ರಾಮಗಳ ಜನರಿಗೆ ಈ ವೈರಸ್‍ಕುರಿತು ಅರಿವು ಮೂಡಿಸಲಾಗುತ್ತಿದೆ.
ಗುಂಡ್ಲುಪೇಟೆ ತಾಲೂಕಿನ ಗಡಿ ಗ್ರಾಮಗಳಾದ ಮದ್ದೂರು, ಮದ್ದೂರು ಕಾಲೋನಿ, ಕಗ್ಗಳದಹುಂಡಿ, ಬೇರಂಬಾಡಿ, ಬೀಚನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿರುವ ಮನೆಗಳಿಗೆ ಆರೋಗ್ಯ ಇಲಾಖೆ ತಂಡ ಭೇಟಿ ನೀಡಿ ವೆಸ್ಟ್ ನೈಲ್ ಸೋಂಕಿನಿಂದ ಬರುತ್ತಿರುವ ಜ್ವರದ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ. ಜೊತೆಗೆ ಈ ವೈರಸ್ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ವೆಸ್ಟ್ ನೈಲ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಅಧಿಕಜ್ವರ, ತಲೆನೋವು, ಮೈಕೈ ನೋವು, ಕೀಲು ನೋವು, ಕುತ್ತಿಗೆ ಬಿಗಿತ, ನಡುಕ, ಸೆಳೆತ ಮತ್ತು ಸ್ನಾಯುದೌರ್ಬಲ್ಯ ಉಂಟಾದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಆರೋಗ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದೆ. ವೆಸ್ಟ್ ನೈಲ್ ಸೋಂಕಿಗೆ ಆತಂಕ ಪಡದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ರೋಗವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಜನರಿಗೆ ಧೈರ್ಯ ತುಂಬುತ್ತಿದ್ದಾರೆ.