ದೇವರ ಚಿನ್ನಾಭರಣ ಕಳವುಗೈದ ಪ್ರಕರಣ; ಆರೋಪಿ ದೇವಸ್ಥಾನದ ಅರ್ಚಕ ಅರೆಸ್ಟ್
ಗಂಗೊಳ್ಳಿ- ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ದೇವಿಗೆ ಅರ್ಪಿಸಿದ ೨೧ ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಮತ್ತು ಕೆಲವು ಚಿನ್ನಾಭರಣಗಳನ್ನು ನಕಲಿಯಾಗಿ ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (೪೩) ಬಂಧಿತ ಆರೋಪಿಯಾಗಿದ್ದು, ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಅಚರ್ಕನಾಗಿದ್ದ.
ಘಟನೆ ವಿವರ: ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇವೆ, ಹರಕೆ ರೂಪದಲ್ಲಿ ನೀಡಿದ ಚಿನ್ನಾಭರಣಗಳನ್ನು ದೇವರ ಮೂರ್ತಿಗೆ ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿದಿನ ದೇವರ ಮೂರ್ತಿಯ ಮೈಮೇಲೆ ಇರುತ್ತಿತ್ತು. ಸೆ. ೨೧ ರಂದು ಸಂಜೆ ೭ ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜೆ ಮಾಡುತ್ತಿದ್ದ ಅರೊಪಿ ಅರ್ಚಕನಲ್ಲಿ ನವರಾತ್ರಿ ಉತ್ಸವದ ಸಲುವಾಗಿ ದೇವರ ಮೈಮೇಲಿದ್ದ ಚಿನ್ನಾಭರಣಗಳನ್ನು ಶುದ್ದಚಾರ ಮಾಡಲು ನೀಡುವಂತೆ ಹೇಳಿ ಪಡೆದುಕೊಂಡಾಗ ಆ ಆಭರಣಗಳು ಈ ಹಿಂದೆ ಇದ್ದ ಆಭರಣಗಳಂತೆ ಇರದೇ ಬೇರೆ ರೀತಿಯಲ್ಲಿ ಇದ್ದ ಹಾಗೂ ಅಸಲಿ ಚಿನ್ನದಂತೆ ಕಂಡುಬಂದಿಲ್ಲ. ಈ ಬಗ್ಗೆ ಅಸಲಿ ಚಿನ್ನಾಭರಣಗಳನ್ನು ತಾನು ತೆಗೆದಿರುವುದಾಗಿ ಒಪ್ಪಿಕೊಂಡು ಅವುಗಳನ್ನು ತಾನು ವೈಯುಕ್ತಿಕವಾಗಿ ಸ್ವಂತಕ್ಕೆ ಬಳಸಿಕೊಂಡ ಬಗ್ಗೆ ತಿಳಿಸಿದ್ದಾನೆ.
ಅಂದಾಜು ೩.೨೦ ಲಕ್ಷ ರೂ. ಮೌಲ್ಯದ ೪೦ ಗ್ರಾಂ ತೂಕದ ಚಿನ್ನದ ಜೋಬಿನ ಸರ, ೫.೮೪ ಲಕ್ಷ ರೂ. ಮೌಲ್ಯದ ೭೩ ಗ್ರಾಂ ತೂಕದ ಹವಳ ಸೇರಿದ ಚಿನ್ನದ ಕಾಸಿ ತಾಳಿ ಸರ, ೫.೮೪ ಲಕ್ಷ ರೂ. ಮೌಲ್ಯದ ೭೩ ಗ್ರಾಂ ತೂಕದ ಚಿನ್ನದ ಕರಿಮಣಿ ಸರ, ೫.೧೨ ಲಕ್ಷ ರೂ. ಮೌಲ್ಯದ ೬೪ ಗ್ರಾಂ ತೂಕದ ಚಿನ್ನದ ನಕ್ಲೇಸ್, ೪೮ ಸಾವಿರದ ೬ ಗ್ರಾಂ ತೂಕದ ೩ ಚಿನ್ನದ ತಾಳಿ, ೬೪ ಸಾವಿರದ ೮ ಗ್ರಾಂ ತೂಕದ ಚಿನ್ನದ ಚೈನ್ ಸರ ಸಹಿತ ಒಟ್ಟು ರೂ ೨೧.೧೨ ಲಕ್ಷ ರೂ. ಮೌಲ್ಯದ ೨೬೪ ಗ್ರಾಂ (೩೩ ಪವನ್) ತೂಕದ ಚಿನ್ನಾಭರಣಗಳನ್ನು ದೇವರ ಮೂರ್ತಿಯ ಮೇಲಿನಿಂದ ತೆಗೆದು ಕಳವುಗೈದಿದ್ದಾನೆ. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಿಗೆ ಮತ್ತು ಭಕ್ತರಿಗೆ ಯಾವುದೇ ಸಂಶಯ ಬರಬಾರದೆಂಬ ಉದ್ದೇಶದಿಂದ ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿಯ ಮೇಲೆ ಹಾಕಿದ್ದರು ಎನ್ನಲಾಗಿದೆ. ಕಳವು ಮಾಡಿದ ಚಿನ್ನಾಭರಣಗಳನ್ನು ತನ್ನ ಸ್ವಂತಕ್ಕೆ ಬೇರೆ ಬೇರೆ ಬ್ಯಾಂಕುಗಳಲ್ಲಿ ಅಡಮಾನ ಇಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನಕ್ಕೆ ಮೇ.೧೬ರಿಂದ ಅರ್ಚಕನಾಗಿ ನೇಮಿಸಿಕೊಂಡು ಮಾಸಿಕ ಸಂಬಳ ಹಾಗೂ ವಾಸಕ್ಕೆ ಮನೆಯನ್ನು ನೀಡಿ ಬಾಡಿಗೆಯನ್ನು ನೀಡಲಾಗುತ್ತಿತ್ತು. ಆರೋಪಿಯು ಮೇ.೧೬ ರಿಂದ ಸೆ. ೨೧ರ ಮಧ್ಯಾವಧಿಯಲ್ಲಿ ದೇವಸ್ಥಾನದ ಅರ್ಚಕನಾಗಿದ್ದುಕೊಂಡು ದೇವಸ್ಥಾನದಲ್ಲಿ ಈ ಕುಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಗಂಗೊಳ್ಳಿ ಪಿಎಸ್‌ಐ ಹರೀಶ್ ಆರ್. ನೇತೃತ್ವದಲ್ಲಿ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದು ಹೆಚ್ಚಿನ ತನಿಖೆ ಮುಂದುವರೆದಿದೆ.