ತುಮಕೂರಲ್ಲಿ ಮಿನಿ ಮೈಸೂರು ದಸರಾ ಉತ್ಸವ
ತುಮಕೂರು, ಸೆ. ೨೨- ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅ. ೧೧ ಮತ್ತು ೧೨ ರಂದು ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಬೇಕು ಎಂದು ಗೃಹ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ತುಮಕೂರು ದಸರಾ ಪ್ರಧಾನ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ತುಮಕೂರು ದಸರಾ ಪ್ರಧಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ ಉತ್ಸವವನ್ನು ಧಾರ್ಮಿಕ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸಲು ಈಗಾಗಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನೊಳಗೊಂಡ ಸಮಿತಿ, ಉಪಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಮೊದಲ ಬಾರಿಗೆ ದಸರಾ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಉತ್ಸವವನ್ನು ವ್ಯವಸ್ಥಿತವಾಗಿ ರೂಪಿಸಲು ರಚಿಸಿರುವ ಸ್ವಾಗತ, ಆಹಾರ, ಸಾಂಸ್ಕೃತಿಕ, ಮೆರವಣಿಗೆ, ರೈತ ದಸರಾ ಮತ್ತು ವಸ್ತು ಪ್ರದರ್ಶನ, ಕವಿಗೋಷ್ಠಿ, ಮಕ್ಕಳ ದಸರಾ, ಮಹಿಳಾ ದಸರಾ, ಯುವ ದಸರಾ, ದೀಪಾಲಂಕಾರ, ಕ್ರೀಡೆ, ವೇದಿಕೆ ನಿರ್ಮಾಣ ಸಮಿತಿ ಸೇರಿದಂತೆ ಎಲ್ಲಾ ಸಮಿತಿಗಳಿಗೂ ಸ್ಥಳೀಯ ಜನಪ್ರತಿನಿಧಿ, ದೇವಸ್ಥಾನದ ಅರ್ಚಕರು, ನಾಗರಿಕರು, ಪತ್ರಕರ್ತರನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮಗಳ ರೂಪು-ರೇಷೆಗಳನ್ನು ತಯಾರಿಸಬೇಕು ಎಂದು ನಿರ್ದೇಶಿಸಿದ ಅವರು, ಯಾವುದೇ ಜಾತಿ, ಮತ, ಧರ್ಮ, ವೈಯುಕ್ತಿಕ ಪ್ರತಿಷ್ಠೆಗಳಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಉತ್ಸವದಲ್ಲಿ ಪಾಲ್ಗೊಂಡು ಜಿಲ್ಲೆಯ ಖ್ಯಾತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗಾಗಿ ರೂಪಿಸಿರುವ ಸಿದ್ಧತೆಗಳನ್ನು ಪವರ್ ಪಾಯಿಂಟ್ ಪ್ರದರ್ಶನದ ಮೂಲಕ ಸಭೆಗೆ ಮಾಹಿತಿ ನೀಡಿ, ೨ ದಿನಗಳ ಕಾಲ ನಡೆಯುವ ದಸರಾ ಉತ್ಸವದಲ್ಲಿ ರಾಜ್ಯದ ಪ್ರಸಿದ್ಧ ಗಾಯಕರಿಂದ ಗೀತ ಗಾಯನ, ಮಕ್ಕಳಿಂದ ಶಾಸ್ತ್ರೀಯ ಸಂಗೀತ ಕಚೇರಿ, ಸ್ಥಳೀಯ ಕಲೆಗಳ ಪ್ರದರ್ಶನ, ಮ್ಯಾರಥಾನ್ ಸ್ಪರ್ಧೆ, ಕ್ರೀಡಾ ಸ್ಪರ್ಧೆ ಆಯೋಜಿಸಲು ಅಧಿಕಾರಿಗಳ ತಂಡ ಅಣಿಯಾಗಿದೆ. ಉತ್ಸವದ ೨ನೇ ದಿನ ಅಂತಿಮವಾಗಿ ಜನಾಕರ್ಷಕವಾದ ಡ್ರೋಣ್ ಪ್ರದರ್ಶನ ಹಾಗೂ ಬಾಣ-ಬಿರುಸುಗಳ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪವರ್ ಪಾಯಿಂಟ್ ಪ್ರದರ್ಶನವನ್ನು ವೀಕ್ಷಿಸಿ ಮಾತನಾಡಿದ ಸಚಿವರು, ಮಕ್ಕಳ ದಸರಾ ಅಂಗವಾಗಿ ಏರ್ಪಡಿಸಲಾಗುವ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಭಾಗವಹಿಸಬೇಕು. ಮಹಿಳಾ ದಸರಾ ಕಾರ್ಯಕ್ರಮದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ರಂಗೋಲಿ ಸ್ಪರ್ಧೆ, ದಸರಾ ಗೊಂಬೆ ಪ್ರದರ್ಶನ ಸ್ಪರ್ಧೆಯನ್ನು ಏರ್ಪಡಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಅವರಿಗೆ ನಿರ್ದೇಶನ ನೀಡಿದರು.
ತುಮಕೂರು ದಸರಾ ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ತುಮಕೂರು ದಸರಾ ಪ್ರಧಾನ ಸಮಿತಿ ಸಹ ಅಧ್ಯಕ್ಷ ವಿ. ಸೋಮಣ್ಣ ಅವರು, ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಆಯೋಜಿಸುತ್ತಿರುವ ತುಮಕೂರು ದಸರಾ ಕಾರ್ಯಕ್ರಮ ಮುಂದಿನ ಪೀಳಿಗೆ ನೆನಪಿಟ್ಟುಕೊಳ್ಳುವಂತಾಗಬೇಕು. ನಮ್ಮ ಪರಂಪರೆ, ಸಂಪ್ರದಾಯಗಳನ್ನು ಉಳಿಸಿ ಬೆಳೆಸಲು ಇಂತಹ ಹಬ್ಬಗಳ ಸಾಮೂಹಿಕ ಆಚರಣೆ ಅಗತ್ಯವಿದೆ. ಮೊದಲ ಬಾರಿಗೆ ದಸರಾ ಆಚರಿಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಪ್ರಮುಖ ಬೀದಿ ಮತ್ತು ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.