ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ:ಬಿ.ಫೌಜಿಯಾ ತರನ್ನುಮ್
ಕಲಬುರಗಿ:ಮೇ.1:ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇದೇ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 6 ಮತ್ತು ಮೇ 7 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಸಂಬಂಧಿಸಿದ ಜಿಲ್ಲಾ-ರಾಜ್ಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿಗೆ ಮುಖ್ಯ ಚುನಾವಣಾಧಿಕಾರಿಗಳು, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು ಇಲ್ಲಿ ಸ್ಥಾಪಿಸಲಾಗಿರುವ ರಾಜ್ಯ ಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಗೆ ಹಾಗೂ ಅದೇ ರೀತಿ ಜಿಲ್ಲೆಯ ಚುನಾವಣಾ ಕಣದಲ್ಲಿರುವ ಅಭ್ಯøರ್ಥಿಗಳು ತಮ್ಮ ಚುನಾವಣಾ ಜಾಹೀರಾತನ್ನು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ವಾರ್ತಾ ಭವನದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ ಜಾಹೀರಾತು ಪ್ರಕಟಣೆ ದಿನಾಂಕಕ್ಕಿಂತ ಎರಡು ದಿನ ಮುಂಚೆ ಅನುಬಂಧ-ಸಿ ನಮೂನೆಯೊಂದಿಗೆ ಸ್ವಯಂ ದೃಢೀಕೃತ ಎರಡು ಜಾಹೀರಾತು ಪ್ರತಿಯನ್ನು ಸಲ್ಲಿಸಿ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸುವುದು ಕಡ್ಡಾಯವಾಗಿರುತ್ತದೆ.
ಇನ್ನು ಚುನಾವಣಾ ಬಹಿರಂಗ ಪ್ರಚಾರ ಮೇ-5ರ ಸಂಜೆ 5 ಗಂಟೆ ವರೆಗೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಎಂದಿನಂತೆ ಜಿಲ್ಲಾ ಎಂ.ಸಿ.ಎಂ.ಸಿ. ಸಮಿತಿಯಿಂದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗೆ ಮೇ-5ರ ಸಂಜೆ 5 ಗಂಟೆ ವರೆಗೆ ಸುದ್ದಿ ವಾಹಿನಿ, ಇ-ಪೇಪರ್, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ, ಆಡಿಯೋ-ವಿಡಿಯೋ ಪ್ರದರ್ಶನ, ಇತರೆ ಸಾರ್ವಜನಿಕ ಡಿಸ್ಪ್ಲೆಗಳಲ್ಲಿ ಚುನಾವಣಾ ಜಾಹೀರಾತು ಬಿತ್ತರಿಸಲು ಸಮಿತಿಯಿಂದ ಪೂರ್ವಾನುಮತಿ ನೀಡಲಾಗುತ್ತದೆ.
ಪೂರ್ವಾನುಮತಿ ಇಲ್ಲದೆ ಜಾಹೀರಾತು ಪ್ರಕಟಿಸುವಂತಿಲ್ಲ: ಇನ್ನು ಪತ್ರಿಕೆಗಳು ಮೇ 6 ಮತ್ತು 7 ರಂದು ಯಾವುದೇ ಚುನಾವಣಾ ಜಾಹಿರಾತುಗಳನ್ನು ಪ್ರಕಟಿಸುವ ಮುನ್ನ ಎಂ.ಸಿ.ಎಂ.ಸಿ ಸಮತಿಯಿಂದ ಪೂರ್ವಾನುಮತಿ ಪಡೆಯಲಾಗಿದಿಯೇ ಎಂಬುದನ್ನು ಖಾತ್ರಿಪಡಿಸಿಕೊಂಡೆ ಜಾಹೀರಾತು ಪ್ರಕಟಿಸುವುದು. ಅನುಮತಿ ಇಲ್ಲದೆ ಹೋದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸ್ಪಷ್ಠಪಡಿಸಿದ್ದಾರೆ.
ಕಾಸಿಗಾಗಿ ಸುದ್ದಿ ಮೇಲು ತೀವ್ರ ನಿಗಾ: ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ರೇಡಿಯೋ, ಕೇಬಲ್ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳ ಪ್ರಸಾರವಾಗುವ “ಕಾಸಿಗಾಗಿ ಸುದ್ದಿ” ಮೇಲೆ ನಿಗಾ ಇಡಲು ಜಿಲ್ಲಾ ಮೀಡಿಯಾ ಮಾನಿಟರಿಂಗ್ ಸೆಲ್ 24 ಗಂಟೆ ಕಾರ್ಯನಿರ್ವಹಿಸುತ್ತಿದ್ದು, ಮತದಾನದ ಪೂರ್ವ 72 ಗಂಟೆ ಅವಧಿಯಲ್ಲಿ ಬಿತ್ತರಿಸುವ ಸುದ್ದಿ, ಪ್ರಸಾರದ ಮೇಲೆ ಚುನಾವಣಾ ಆಯೋಗ ಹದ್ದಿನಕಣ್ಣು ಇಟ್ಟಿದೆ.