ದೇಶದ ಭವಿಷ್ಯ ರೂಪಿಸಲು ಕಾಂಗ್ರೆಸ್ ಬೆಂಬಲಿಸಿ:ಪ್ರಿಯಾಂಕ್ ಖರ್ಗೆ
ಕಲಬುರಗಿ,ಏ.30: ಈ ಸಲದ ಚುನಾವಣೆ ದೇಶದ ಹಾಗೂ ಯುವಕರ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ರೈತರ, ಬಡವರ, ಶ್ರಮಿಕರ , ಮಧ್ಯಮವರ್ಗದ ಜನರ ಸಂಕಟ ಹೆಚ್ಚಾಗಿದೆ. ದಿನಬಳಕೆ ವಸ್ತುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇದಕ್ಕೆಲ್ಲ ತಿಲಾಂಜಲಿ ಹಾಕಬೇಕಂದರೆ ಮತದಾರರು ಕಾಂಗ್ರೆಸ್‍ಗೆ ಆಶೀರ್ವದಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.
ನಗರದ ಫಿಲ್ಟರ್ ಬೆಡ್ ಬಡಾವಣೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡುತ್ತಿದ್ದರು.ಕೋರೋನಾ ನಂತರ ಯುವಕರ ಭವಿಷ್ಯಕ್ಕೆ ಕುತ್ತು ಬಂದಿದೆ. ಆರ್ಥಿಕ ಸಮಸ್ಯೆಯಿಂದಾಗಿ ಶಾಲೆಗೆ ಹೋಗುವ ಮಕ್ಕಳು ಕೂಡಾ ಮನೆ ಮನೆಗೆ ಪಾತ್ರೆ ತೊಳೆಯಲು ಹೋಗುತ್ತಿದ್ದಾರೆ. ಜನರ ಕಷ್ಟಗಳನ್ನು ಅರಿತುಕೊಂಡು ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿ, ಸರ್ಕಾರ ಬಂದಮೇಲೆ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಜನರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ಹೇಳಿದರು.ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತವಚಲಾಯಿಸುವ ಮೂಲಕ ಕೇಂದ್ರದಲ್ಲಿ ಜನ ಪರವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಹಕರಿಸಿ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಆರೋಪಿಸಿದರು.ಬಿಜೆಪಿ ಸರ್ಕಾರ ಪ್ರತಿಯೊಂದು ವಸ್ತುಗಳ ಮೇಲೆ ಜಿಎಸ್‍ಟಿ ತೆರಿಗೆ ವಿಧಿಸುತ್ತಿದ್ದಾರೆ. ಇದರಿಂದ ಬಡವರು ಬಳಸುವ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಜಿಎಸ್‍ಟಿ ತೆರಿಗೆ ರದ್ದುಪಡಿಸುವ ಮೂಲಕ ಬೆಲೆಗಳನ್ನು ತಗ್ಗಿಸಲಿದೆ ಎಂದು ಭರವಸೆ ನೀಡಿದರು.
ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಸಿಎಂ ಸಲಹೆಗಾರ ಬಿ.ಆರ್. ಪಾಟೀಲ್, ಶಾಸಕಿ ಕನೀಜ್ ಫಾತೀಮಾ, ವೀರಣ್ಣ ಮತ್ತಿಕಟ್ಟಿ, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಹಲವರಿದ್ದರು.