ಚುನಾವಣಾ ಆಯೋಗದ ನಿರ್ದೇಶಾನುಸಾರ ಕಾರ್ಯನಿರ್ವಹಿಸಿ
ಬಾಗಲಕೋಟೆ,ಏ. 27 : ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ನಿರ್ದೇಶಾನುಸಾರ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿಧಾನ ಸಭಾವಾರು ಇವಿಎಂ ಹಾಗೂ ವಿವಿಪ್ಯಾಟ್ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಧ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿÀ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅವರು ಮಾತನಾಡಿದರು.
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಮತಯಂತ್ರದ ಕಮಿಶನ್ನಿಂಗ್ ಕಾರ್ಯದ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆಯೂ ಈ ಪ್ರಕ್ರಿಯೆ ಮುಗಿಯುವರೆಗೂ ಹಾಜರಿದ್ದು, ಮೇಲ್ವಿಚಾರಣೆ ವಹಿಸಬೇಕೆಂದು ಸೂಚಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಇಲ್ಲಿ ಎರಡು ಬ್ಯಾಲೆಟ್ ಯುನಿಟ್ ಬಳಸಲಾಗುತ್ತಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಮಾಸ್ಟರ್ ಟ್ರೇನರಗಳು ಜವಾಬ್ದಾರಿಯಿಂದ ಚುನಾವಣಾ ಆಯೋಗ ನೀಡಿರುವ ಹಾಗೂ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿ ಬಗ್ಗೆ ತಿಳಿದುಕೊಂಡು ಕಾರ್ಯ ನಿರ್ವಹಿಸಬೇಕು ಎಂದರು.
ಚುನಾವಣಾ ಕರ್ತವ್ಯದ ಹಾಗೂ ಇವಿಎಂ ಹಾಗೂ ವಿವಿಪ್ಯಾಟ್‍ಗಳ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಮನನ ಮಾಡಿಕೊಳ್ಳಬೇಕು. ಏನಾದರೂ ಸಮಸ್ಯೆಗಳಿದ್ದರೆ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಚುನಾವಣಾ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ಮತದಾನದ ದಿವಸ ಸಂಭವನೀಯ ಸವಾಲುಗಳು ಹಾಗೂ ಮತಯಂತ್ರ ಬಳಕೆ ಕುರಿತು ತರಬೇತಿ ಮೂಲಕ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ರಮೇಶ ಕಳಸದ. ಜಿಲ್ಲಾ ಚುನಾವಣಾ ಶಾಖೆಯ ತಹಶೀಲ್ದಾರರಾದ ಪಂಪಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮೇಲ್ವಿಚಾರಕರು ಉಪಸ್ಥಿತರಿದ್ದರು.