ಥ್ರೋಬಾಲ್. ಹ್ಯಾಂಡಬಾಲ್ ಕ್ರೀಡಾಕೂಟ ಉದ್ಘಾಟಿಸಿದ ಚಿದಾನಂದ ಸವದಿ
ಅಥಣಿ : ಸೆ.೨೧:ಕ್ರೀಡೆ ನಮ್ಮ ಜೀವನದ ಪ್ರಮುಖ ಭಾಗವಾಗಿದ್ದು, ವಿದ್ಯಾರ್ಥಿಗಳು ಕ್ರೀಡೆಗಳ ಕಡೆ ಹೆಚ್ಚಿನ ಗಮನ ಹರಿಸಿದಾಗ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಬಹುದು ಇದರಿಂದ ಅವರ ವಿಧ್ಯಾಭ್ಯಾಸಕ್ಕೊ ಹೊಸ ಚೈತನ್ಯ ಬರುತ್ತದೆ ಎಂದು ಯುವ ಮುಖಂಡ ಚಿದಾನಂದ ಸವದಿ ಹೇಳಿದರು.
ಅವರು ಅಥಣಿ ಪಟ್ಟಣದ ಜಾಧವಜಿ ಶಿಕ್ಷಣ ಸಂಸ್ಥೆಯ ಪ. ಪೂ. ಕಾಲೇಜು ಆವರಣದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ, ಚಿಕ್ಕೋಡಿ ಹಾಗೂ ಜೆ. ಎ. ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಥ್ರೋಬಾಲ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಇದನ್ನು ಸಮನಾಗಿ ಸ್ವೀಕರಿಸುವ ಮೂಲಕ ಆಸಕ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಇಂದು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಆಗುತ್ತಿದ್ದು, ಯುವ ಜನತೆ ಕ್ರೀಡೆಗಳಲ್ಲಿ ಯಶಸ್ಸು ಪಡೆದು ಉನ್ನತ ಹುದ್ದೆಗಳ ಸ್ಥಾನಮಾನ ಪಡೆಯಬಹುದಾಗಿದೆ. ಅನೇಕ ಕ್ರೀಡಾಪಟುಗಳು ದೇಶ ವಿದೇಶಗಳಲ್ಲಿ ನಮ್ಮ ದೇಶದ ಕೀರ್ತಿಯನ್ನು ಹೆಚ್ಚಿಸುತ್ತಿದ್ದಾರೆ. ಹಾಗೆಯೇ ನಮ್ಮ ತಾಲೂಕಿನ ಕ್ರೀಡಾಪಟುಗಳು ಕೂಡ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವ ಮೂಲಕ ತಾಲೂಕಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಪಿಯು ಉಪನಿರ್ದೇಶಕ ಪಿ. ವೈ ಭಂಡಾರಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆ ಹೊಂದಬೇಕು. ಈ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಕ್ರೀಡಾ ಪ್ರತಿಭೆ ಮತ್ತು ಕೌಶಲ್ಯವನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಜಾದವಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ರಾಮ ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಸ್. ಎಸ್. ಸಂಗೋರಾಮ, ಕ್ರೀಡಾ ಸಮಿತಿ ಅಧ್ಯಕ್ಷ ಅವಿನಾಶ ಸೊಲ್ಲಾಪುರಕರ, ಜಿಲ್ಲಾ ಕ್ರೀಡಾ ಸಂಯೋಜಕ ಅಜಯ ಮೋನೆ, ತಾಲೂಕಾ ಕ್ರೀಡಾ ಸಂಯೋಜಕ ಜಿ. ಎಂ. ಚನಗೊಂಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂದೀಪ ಸಂಗೋರಾಮ ಸ್ವಾಗತಿಸಿದರು. ಅನಿಲ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಿಯಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಪ್ರಾಚಾರ್ಯ ಎಂ ಪಿ ಮೇತ್ರಿ ವಂದಿಸಿದರು.
ಸುಮಾರು ೧೦೬ ವರ್ಷಗಳ ಕಾಲ ಜೆ ಎ ಶಿಕ್ಷಣ ಸಂಸ್ಥೆ ಮಕ್ಕಳಿಗೆ ನಿರಂತರವಾಗಿ ಶಿಕ್ಷಣ ನೀಡುತ್ತಾ ಬಂದಿರುವುದು ಹೆಮ್ಮೆಯ ಸಂಗತಿ ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಕಲಿತ ವಿದ್ಯಾರ್ಥಿಗಳು ಇಂದು ದೇಶ ವಿದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಸಂಸ್ಥೆಯ ಕೀರ್ತಿ ಬೆಳಗಿ ತಮ್ಮ ಜೀವನದಲ್ಲಿ ಯಶಸ್ವಿಯಾಗಿದ್ದಾರೆ, ಇಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ.