ವಿ.ಎಸ್.ಕೆ ವಿವಿಯಲ್ಲಿ ಅಂಬೇಡ್ಕರ್ ಜಯಂತಿ
ಸಂಜೆವಾಣಿ ವಾರ್ತೆ
ಬಳ್ಳಾರಿ, ಏ.15: ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್  ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ  ಅಡಿಯಲ್ಲಿ ಸಂವಿಧಾನದ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಗಳಾದ ಪ್ರೊ. ವಿಜಯ ಕುಮಾರ್ ಮಲಶೆಟ್ಟಿ, ಕುಲಸಚಿವರಾದ ಎಸ್ ಎನ್ ರುದ್ರೇಶ್, ಕುಲಸಚಿವರು (ಮೌಲ್ಯಮಾಪನ) ಪ್ರೊ ರಮೇಶ್ ಓಲೇಕಾರ ಬಾಬಾ ಸಾಹೇಬ್ ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಲು ಕುಲಪತಿಗಳು ಕರೆ ನೀಡಿದರು.
ಸಂವಿಧಾನದ ಆಶಯದಂತೆ ಎಲ್ಲರೂ ತಮ್ಮ ಹಕ್ಕುಗಳನ್ನು ಅರಿತುಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದ ಕೀರ್ತಿ ಬಾಬಾ ಸಾಹೇಬ್ ರಿಗೆ ಸಲ್ಲುತ್ತದೆ ಎಂದು ಕುಲಸಚಿವ ಎಸ್ ಎನ್ ರುದ್ರೇಶ್ ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ನಿಕಾಯದ ಡೀನರು, ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.