ಜಲ,ಅಂತರ್ಜಲ ಸಂರಕ್ಷಣೆಗೆ ಆದ್ಯತೆ
ಧಾರವಾಡ,ಏ8: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿದ್ದರೂ ನೀರಿನ ಸಮಸ್ಯೆ ಉಂಟಾಗುತ್ತಿದೆ, ಅಂರ್ತಜಲಮಟ್ಟ ಕುಸಿಯುತ್ತಿದೆ. ಕೋಳವೆಬಾವಿಗಳು ಬತ್ತುತ್ತಿವೆ. ಇದಕ್ಕೆ ಕಾರಣ ನಮ್ಮಲ್ಲಿ ಜಲಸಾಕ್ಷರತೆ ಕಡಿಮೆ ಇರುವುದು. ಆದ್ದರಿಂದ ಜಿಲ್ಲೆಯಲ್ಲಿ ಜಲ ಸಂರಕ್ಷಣದ ಆಂದೋಲನವನ್ನು ಒಂದು ಗ್ರಾಮ ಒಂದು ಕೆರೆ ಯೋಜನೆ ಮೂಲಕ ಮಾಡಲಾಗುತ್ತದೆ ಎಂದು ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ದಿಗಾಗಿ ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಜರುಗಿಸಿ, ಮಾತನಾಡಿದರು.
ಜಿಲ್ಲೆಯಲ್ಲಿ 1206 ಕೆರೆಗಳಿವೆ. ಪ್ರತಿ ವರ್ಷ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ, ಸಣ್ಣ ನಿರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮ ಪಂಚಾಯತ, ಲೋಕೋಪಯೋಗಿ, ಅರಣ್ಯ ಹೀಗೆ ವಿವಿಧ ಇಲಾಖೆಗಳಿಂದ ಹೂಳೆತ್ತುವ ಕಾಮಗಾರಿ, ಬಂಡು ಕಟ್ಟುವ ಕಾಮಗಾರಿ, ಪಿಚ್ಚಿಂಗ್ ವರ್ಕ ಹೀಗೆ ಕಾಮಗಾರಿ ಮಾಡಲಾಗುತ್ತದೆ. ಆದರೆ ಅದರ ಪ್ರತಿಫಲ ಅμÁ್ಟಗಿ ಕಾಣುತ್ತಿಲ್ಲ ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಲ್ಲಿನ ಪರಸ್ಪರ ಸಮನ್ವಯದ ಕೊರತೆ ಮತ್ತು ಸಮಗ್ರ ಅಭಿವೃದ್ಧಿ ಕುರಿತ ಆಲೋಚನೆ ಇಲ್ಲದೆ ಇರುವುದು, ಕೆರೆಗಳ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ ಎಂದು ಅವರು ಹೇಳಿದರು.
ಧಾರವಾಡ ಜಿಲ್ಲೆಯಲ್ಲಿ ಪ್ರತಿಯೊಂದು ಗ್ರಾಮಕ್ಕೆ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತದಿಂದ ಒಂದು ಗ್ರಾಮ-ಒಂದು ಕೆರೆ ಯೋಜನೆಯನ್ನು ಅನುμÁ್ಠನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಈ ಯೋಜನೆಯನ್ನು ಗ್ರಾಮಸ್ಥರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಜಿಲ್ಲೆಯ 1206 ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದ್ದು, ಹಂತಹಂತವಾಗಿ ಕೆರೆಗಳನ್ನು ಈ ಯೋಜನೆಗೆ ಒಳಪಡಿಸಲಾಗುವುದು. ಮೊದಲ ಹಂತದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಹಾಗೂ ಸಣ್ಣ ನಿರಾವರಿ ಇಲಾಖೆಯ ಕೆರೆಗಳನ್ನು ತೆಗೆದುಕೊಳ್ಳಲಾಗುವುದು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳು ಈ ಕುರಿತು ಸ್ಪಷ್ಟವಾದ ಮಾಹಿತಿ ಮತ್ತು ನೀಲನಕ್ಷೆಯೊಂದಿಗೆ ಮುಂದಿನ ಸಭೆಯೊಳಗಾಗಿ ಕ್ರಿಯಾಯೋಜನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಾರ್ವಜನಿಕರ ಸಹಭಾಗಿತ್ವ: ಒಂದು ಗ್ರಾಮ-ಒಂದು ಕೆರೆ ಯೋಜನೆಯಲ್ಲಿ ತೆಗೆದುಕೊಳ್ಳುವ ಕೆರೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಾರ್ವಜನಿಕರ ಸಹಕಾರ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಸಾಧ್ಯವಾದಷ್ಟು ಗ್ರಾಮೀಣ ಕೆರೆಗಳನ್ನು ನರೇಗಾ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಕ್ರಮವಹಿಸಬೇಕು. ಜನರಿಗೆ ತಮ್ಮ ಊರಿನ ಕೆರೆ ಬಗ್ಗೆ ಅಭಿಮಾನ, ಪ್ರೀತಿ, ಭಕ್ತಿ ಇರುತ್ತದೆ. ಅವರು ಈ ಕೆರೆ ಅಭಿವೃದ್ಧಿ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಭಾಗಿ ಆಗುತ್ತಾರೆ. ಈ ಕುರಿತು ಗ್ರಾಮಸಭೆ ಮತ್ತು ವಿಶೇಷ ಸಭೆಗಳನ್ನು ಗ್ರಾಮಗಳಲ್ಲಿ ಆಯೋಜಿಸುವ ಮೂಲಕ ಗ್ರಾಮ ಪಂಚಾಯತ, ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ನಿರಾವರಿ ಇಲಾಖೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ಮಧ್ಯಮ ಮತ್ತು ಬೃಹತ್ ನೀರಾವರಿ, ಗ್ರಾಮೀಣ ಅಭೀವೃದ್ಧಿ ಮತ್ತು ಪಂಚಾಯತ ರಾಜ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.