ಬೇಸಿಗೆ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಕೆಲವು ಸಲಹೆಗಳು
ಕಲಬುರಗಿ,ಏ.07:ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯಿಂದ ನೀಡಲಾದ ಈ ಕೆಳಕಂಡ ಸಲಹೆಗಳನ್ನು ತಪ್ಪದೇ ಪಾಲಿಸಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರತಿಕಾಂತ ವ್ಹಿ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರು ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. ಪ್ರಯಾಣದ ಮಾಡುವ ಸಂದರ್ಭದಲ್ಲಿ ನೀರನ್ನು ಜೊತೆಗೆ ತೆಗೆದುಕೊಂಡು ಹೋಗಬೇಕು. ಪುನರ್ಜಲೀಕರಣ ದ್ರಾವಣ , ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್‍ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬೇಕು. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣುಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್ ಹಾಗೂ ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಲು ತಿಳಿ ಬಣ್ಣದ, ಅಳಕವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಹೋಗುವ ಸಂದರ್ಭದಲ್ಲಿ ಛತ್ರಿ, /ಟೋಪಿ/ಹ್ಯಾಟ್ ಟಾವೆಲ್ ಅಥವಾ ಇನ್ನಾವುದೇ ಸಾಂಪ್ರಾದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ಪಾದರಕ್ಷೆ/ಚಪ್ಪಲಿ ಅಥವಾ ಶೂಗಳನ್ನು ಧರಿಸಬೇಕು.
ಸದಾ ಎಚ್ಚರಿಕೆಯಿಂದ ಇದ್ದು, ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿ ಪಡೆದು ಅದರಂತೆ ಚಟುವಟಿಕೆ ನಡೆಸಬೇಕು. ಹವಾಮಾನದ ಕುರಿತು ಕಾಲಕಾಲಕ್ಕೆ ಮಾಹಿತಿಯನ್ನು ಪಡೆಯಲು (Karnatak State Natural Disaster Monitoring centre https://ksdma.karnataka.gov.in/english) ಜಾಲತಾಣಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಬೇಕು. ನೇರವಾಗಿ ಸೂರ್ಯ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಬೇಕು. ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲವಾಗುವಂತೆ ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆದಿಡಬೇಕು.
ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ದಿನದ ತಣ್ಣನೆಯ ಸಮಯದಲ್ಲಿ ಮುಗಿಸಬೇಕು. ಅಂದರೆ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಬೇಕು. ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳನ್ನು ಬೆಳಿಗ್ಗೆ 11 ಗಂಟೆಯೊಳಗಾಗಿ ಮುಕ್ತಾಯಗೊಳಿಸಬೇಕು.
ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು /ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆ ನೀಡಲು ಅಗತ್ಯ ಶಾಮೀಯಾನ /ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಸಭಿಕರಿಗೆ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು.
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಆರೋಗ್ಯ ಸಮಸ್ಯೆಗಳು ಇರುವವರು ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಬಿಸಿಲಿನಲ್ಲಿ ಮಧ್ಯಾಹ್ನ 12 ಗಂಟೆಯ ನಂತÀರ ಹೊರಹೋಗುವುದನ್ನು ತಪ್ಪಿಸಬೇಕು.